ಪ್ರಜಾವಾಣಿ ವಾರ್ತೆ
ಶಿವಮೊಗ್ಗ: ‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನೆಪದಲ್ಲಿ ಜಾತಿ ಗಣತಿ ಕೈಗೆತ್ತಿಕೊಂಡಿರುವ ರಾಜ್ಯ ಸರ್ಕಾರ ಸಂವಿಧಾನದ ಆಶಯವನ್ನು ಉಲ್ಲಂಘಿಸಿದೆ. ಅದಕ್ಕಾಗಿ ₹500 ಕೋಟಿ ವ್ಯರ್ಥ ಮಾಡುತ್ತಿದೆ. ಈ ಸಮೀಕ್ಷೆಯ ತೀರ್ಮಾನ ಕೈಗೊಂಡ ರಾಜ್ಯ ಸಂಪುಟ ಸಭೆಯ ಸದಸ್ಯರ ವಿರುದ್ಧ ಮೊದಲು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಿ’ ಎಂದು ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
‘ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ಧ ಸುಪ್ರೀಂ ಕೋರ್ಟ್ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಿ’ ಎಂದು ಸಚಿವ ಮಧು ಬಂಗಾರಪ್ಪ ನೀಡಿದ್ದ ಹೇಳಿಕೆಗೆ ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದರು.
‘ಸಂವಿಧಾನದ ಏಳನೇ ಶೆಡ್ಯೂಲ್ ಪ್ರಕಾರ ಜಾತಿ ಗಣತಿಯ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಆದರೆ ಅದನ್ನು ಮೀರಿ ಅಹಿಂದ ವರ್ಗವನ್ನು ಓಲೈಸಲು ರಾಜ್ಯ ಸರ್ಕಾರ ಸಮೀಕ್ಷೆ ನಡೆಸುತ್ತಿದೆ. ಈ ಹಿಂದೆಯೂ ಕಾಂತರಾಜ ಆಯೋಗ ನೇಮಕ ಮಾಡಿ ಸಮೀಕ್ಷೆ ಹೆಸರಲ್ಲಿ ₹140 ಕೋಟಿಗೂ ಹೆಚ್ಚು ಹಣವನ್ನು ಪೋಲು ಮಾಡಿದೆ’ ಎಂದು ಟೀಕಿಸಿದರು.
ಸಮೀಕ್ಷೆಯ ಬಗ್ಗೆ ರಾಜ್ಯದ ಜನರಿಗೆ ಆಸಕ್ತಿಯೇ ಇಲ್ಲ. ಸ್ವತಃ ಸಂಪುಟದ ಸಚಿವರೇ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯಲ್ಲಿ ಜನರು ಭಾಗಿ ಆಗುವುದು, ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ. ವಾಸ್ತವ ಹೀಗಿದ್ದಾಗ ಸಮೀಕ್ಷೆ ಮಾಡಿ ಪ್ರಯೋಜನವೇನು? ಸೂಕ್ತ ಸಿದ್ಧತೆ ಇಲ್ಲದೇ ತರಾತುರಿಯಲ್ಲಿ ಆರಂಭಿಸಿರುವ ಈ ಸಮೀಕ್ಷೆ ಸಂಪೂರ್ಣ ಅವೈಜ್ಞಾನಿಕ. ಇದಕ್ಕಾಗಿ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದರು.
‘ರಾಜ್ಯದಲ್ಲಿ ಜಾತಿ ರಾಜಕಾರಣ ಆರಂಭಿಸಿದ್ದು ಯಡಿಯೂರಪ್ಪ’ ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಕಿಡಿಕಾರಿದ ರಾಘವೇಂದ್ರ, ‘ಯಡಿಯೂರಪ್ಪ ಸಿಎಂ ಆಗದಿದ್ದರೆ ನಮ್ಮ ಮಠಗಳು ಇನ್ನೂ ಗುಡಿಸಲಲ್ಲಿ ಇರಬೇಕಿತ್ತು ಎಂದು ಮಾದಾರ ಚನ್ನಯ್ಯ ಸ್ವಾಮೀಜಿ ಈಚೆಗೆ ಹೇಳಿಕೆ ನೀಡಿದ್ದಾರೆ. ಮಡಿವಾಳ ಮಾಚಿದೇವ, ಉಪ್ಪಾರ, ಆರ್ಯವೈಶ್ಯ, ವಿಶ್ವಕರ್ಮ, ಅಂಬಿಗರ ಚೌಡಯ್ಯ, ಈಡಿಗ, ಸವಿತಾ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ಅನುದಾನ ನೀಡಿದವರು ಯಡಿಯೂರಪ್ಪ. ಕನಕ ಜಯಂತಿಗೆ ರಜೆ ಘೋಷಿಸಿ ಸಂಗೊಳ್ಳಿ ರಾಯಣ್ಣ, ಕನಕದಾಸರ ಜನ್ಮಸ್ಥಳದ ಅಭಿವೃದ್ಧಿಗೆ ಅನುದಾನ ನೀಡಲು ಯಡಿಯೂರಪ್ಪ ಬರಬೇಕಿತ್ತಾ’ ಎಂದು ಪ್ರಶ್ನಿಸಿದರು. ‘ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಮಧು ಬಂಗಾರಪ್ಪಗೆ ಇಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಮಡಿವಾಳ ಮಾಚಿದೇವ ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರ್, ಮುಖಂಡರಾದ ಮಂಗೋಟೆ ರುದ್ರೇಶ್, ವಿರೂಪಾಕ್ಷಪ್ಪ, ಚಂದ್ರಶೇಖರ್ ಇದ್ದರು.
ಮಧು ಬಂಗಾರಪ್ಪ ಹಗುರವಾಗಿ ಮಾತಾಡುವುದನ್ನು ಬಿಡಬೇಕು. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಸಚಿವರು ಹಾಗೂ ಸಂಸದರು ಒಟ್ಟಾಗಿ ಹೋಗಲಿ ಎಂದು ಹಿರಿಯರಾದ ಕೆ.ಎಸ್.ಈಶ್ವರಪ್ಪ ನೀಡಿರುವ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಿಬಿ.ವೈ.ರಾಘವೇಂದ್ರ ಶಿವಮೊಗ್ಗ ಸಂಸದ
ಶಿಕಾರಿಪುರ ಬಂದ್ಗೆ ಬಿಜೆಪಿ ಬೆಂಬಲ
ಶಿಕಾರಿಪುರ ಮತ್ತು ಸವಳಂಗದ ಬಳಿ ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳು ಅ.9ರಂದು ಕರೆ ನೀಡಿರುವ ಶಿಕಾರಿಪುರ ಬಂದ್ಗೆ ಬಿಜೆಪಿ ಬೆಂಬಲ ನೀಡಲಿದೆ. ಜನರ ವಿರೋಧವಿದ್ದರೂ ಮತ್ತೆ ಅಲ್ಲಿ ರಿ–ಟೆಂಡರ್ ನೀಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.