ಶಿಕಾರಿಪುರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭದಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ
ಹೇಳಿದರು.
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನೂತನ ಅಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಅವರು
ಮಾತನಾಡಿದರು.
ಅಮ್ಲಜನಕ ಘಟಕ ಆರಂಭದಿಂದ ಒಂದು ನಿಮಿಷಕ್ಕೆ 100 ಲೀಟರ್ ಆಮ್ಲಜನಕ ಉತ್ಪಾದನೆಯಾಗಲಿದೆ. 10 ಬೆಡ್ನಲ್ಲಿ ಸೋಂಕಿತರಿಗೆ 24 ಗಂಟೆ ಕಾಲ ಅಮ್ಲಜನಕವನ್ನು ನೀಡಬಹುದು. ಅಮ್ಲಜನಕದ ಕೊರತೆ ಸೋಂಕಿತರಿಗೆ ಉಂಟಾಗುವುದಿಲ್ಲ. ಆಸ್ಪತ್ರೆಯ ವೈದ್ಯಾಧಿಕಾರಿಗಳು ಆಮ್ಲಜನಕ ಉತ್ಪಾದನಾ ಘಟಕವನ್ನು ಸದ್ಬಳಕೆ ಮಾಡಿಕೊಂಡು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.
‘ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಜಿಲ್ಲಾ ಮಟ್ಟದ ಆಸ್ಪತ್ರೆ ರೀತಿ ಸೌಲಭ್ಯಗಳನ್ನು ಹೊಂದಿದೆ. ಆಸ್ಪತ್ರೆ ಅಭಿವೃದ್ಧಿಗೆ ಪೂರಕವಾಗಿ ನಾವು ಸ್ಪಂದಿಸಿದ್ದೇವೆ. ವೈದ್ಯಾಧಿಕಾರಿಗಳು ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು. ಶಿರಾಳಕೊಪ್ಪ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರದಲ್ಲಿ ಕೋವಿಡ್ ಚಿಕಿತ್ಸಾ ಘಟಕ ಪ್ರಾರಂಭವಾಗಲಿದೆ’ ಎಂದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಎಂ.ಪಿ.ಕವಿರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಪ್ಪ, ಸರ್ಕಾರಿ ಆಸ್ಪತ್ರೆ ಕೋವಿಡ್ ಕೇಂದ್ರ ನೋಡಲ್ ಅಧಿಕಾರಿ ಡಾ.ಆರ್.ರಘುನಂದನ್, ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಸದಸ್ಯ ಜೀನಳ್ಳಿ ಪ್ರಶಾಂತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.