ADVERTISEMENT

ಅರ್ಚಕರ ನೆರವಿಗೆ ಬದ್ಧ: ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 3:47 IST
Last Updated 27 ಜೂನ್ 2021, 3:47 IST
ತೀರ್ಥಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರ್ಚಕರಿಗೆ ಆಹಾರದ ಕಿಟ್ ವಿತರಿಸಿದರು. ಶಾಸಕ ಆರಗ ಜ್ಞಾನೇಂದ್ರ ಇದ್ದರು.
ತೀರ್ಥಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರ್ಚಕರಿಗೆ ಆಹಾರದ ಕಿಟ್ ವಿತರಿಸಿದರು. ಶಾಸಕ ಆರಗ ಜ್ಞಾನೇಂದ್ರ ಇದ್ದರು.   

ತೀರ್ಥಹಳ್ಳಿ: ಭಕ್ತರ ನೆಮ್ಮದಿಗಾಗಿ ಸದಾ ಶ್ರಮಿಸುವ ಅರ್ಚಕರ ನೆರವಿಗೆ ಸರ್ಕಾರ ಬದ್ಧವಾಗಿದೆ. ಅವರಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇಲ್ಲಿನ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಧಾರ್ಮಿಕ ದತ್ತಿ, ಮುಜರಾಯಿ ಇಲಾಖೆ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅರ್ಚಕರಿಗೆ ಆಹಾರದ ಕಿಟ್ ವಿತರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 34,500 ಅರ್ಚಕರಿಗೆ ಆಹಾರದ ಕಿಟ್ ವಿತರಿಸಲಾಗಿದೆ. ಅರ್ಚಕರ ತಸ್ತೀಕ್ ಹಣವನ್ನು ಆನ್‌ಲೈನ್ ಮೂಲಕ ಖಾತೆಗೆ ಜಮಾ ಮಾಡಲಾಗುತ್ತಿದೆ. ಮುಜರಾಯಿ ದೇವ ಸ್ಥಾನ, ಅರ್ಚಕರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶ ಇದೆ ಎಂದರು.

ADVERTISEMENT

ದೇವಸ್ಥಾನಗಳು ಸಮಾಜಮುಖಿ ಆಗಿ ಕಾರ್ಯನಿರ್ವಹಿಸಬೇಕು. ಅದಕ್ಕಾಗಿಯೇ ಸಪ್ತಪದಿ ಕಾರ್ಯಕ್ರಮ ಜಾರಿಗೊಳಿಸಿದೆ. ವಿವಾಹ ಕಾರ್ಯಕ್ರಮಕ್ಕೆ ರೇಷ್ಮೆ ಸೀರೆ, ತಾಳಿ ಸರಕ್ಕೆ 8 ಗ್ರಾಂ ಚಿನ್ನ, ಪಂಚೆಗೆ ಧನಸಹಾಯ ನೀಡಲಾಗುತ್ತಿದೆ. ದೇವಸ್ಥಾನಕ್ಕೆ ಬೀಳುಬಿಟ್ಟ ಜಮೀನಿನಲ್ಲಿ ಭತ್ತ ಬೆಳೆಯುವುದಕ್ಕೆ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.

ಶಾಸಕ ಆರಗ ಜ್ಞಾನೇಂದ್ರ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಯಶೋದಾ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್ ಡಾ.ಎಸ್.ಬಿ.ಶ್ರೀಪಾದ್, ತಾಲ್ಲೂಕು ಪಂಚಾಯಿತಿ ಇಒ ಡಾ.ಆಶಾಲತಾ ಇದ್ದರು.

‘ಹಣಗೆರೆ ಕಟ್ಟೆ ಅಭಿವೃದ್ಧಿಗೆ ಯೋಜನೆ’

ಕೋಮು ಸೌಹಾರ್ದ ಧಾರ್ಮಿಕ ಕೇಂದ್ರ ಹಣಗೆರೆಯ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲ್ಲೂಕಿನ ಹಣಗೆರೆಯ ಸೈಯದ್ ಸಾದತ್ ದರ್ಗಾ, ಭೂತರಾಯ, ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದರು.

ಹಣಗೆರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಹಲವು ಸೌಕರ್ಯ ಒದಗಿಸಲಾಗುವುದು. ಕಲ್ಯಾಣಿಗೆ ಹೊಸ ಕಾಯಕಲ್ಪ ನೀಡಬೇಕಿದೆ. ಪ್ರವಾಸೋಧ್ಯಮ ಕೇಂದ್ರವಾಗಿ ರೂಪಿಸಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಹಣಗೆರೆ ಅಭಿವೃದ್ಧಿ ಕುರಿತು ಶಾಸಕ ಆರಗ ಜ್ಞಾನೇಂದ್ರ ಸಮಗ್ರ ಪ್ರಸ್ತಾವ ಸಲ್ಲಿಸಿದ್ದಾರೆ ಎಂದರು. ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕ ಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಬೇಗುವಳ್ಳಿ ಕವಿರಾಜ್, ಬಗರ್‌ಹುಕುಂ ಸಕ್ರಮ ಸಮಿತಿ ಸದಸ್ಯೆ ಪದ್ಮಾ ನವೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.