ADVERTISEMENT

ಕಾಂಗ್ರೆಸ್‌ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 4:42 IST
Last Updated 14 ಅಕ್ಟೋಬರ್ 2021, 4:42 IST
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಉತ್ತರ ಪ್ರದೇಶದ ಲಖೀಂಪುರ್‌ಖೇರಿ ಜಿಲ್ಲೆಯ ಟಿಕೋನಿಯಾ ಗ್ರಾಮದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ವಾಹನ ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿರುವುದನ್ನು ವಿರೋಧಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಮಳೆಯನ್ನೂ ಲೆಕ್ಕಿಸದೇ ಮೌನ ಪ್ರತಿಭಟನೆ ನಡೆಸಿದರು.

ರೈತರ ಹತ್ಯೆ ಖಂಡನೀಯ. ಕೇಂದ್ರ ಸರ್ಕಾರಕ್ಕೆ ರೈತರ ಮೇಲೆ ಯಾವ ಕಾಳಜಿಯೂ ಇಲ್ಲ. ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರೆಂದು ಕರೆದಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಪ್ರತಿಭಟನಾ ನಿರತ ರೈತರನ್ನು ಗೂಂಡಾಗಳೆಂದು ಕರೆಯುತ್ತಾರೆ. ಕರ್ನಾಟಕದ ಮುಖ್ಯಮಂತ್ರಿ ರೈತರನ್ನು ಬೆದರಿಸುವ ಮಟ್ಟಕ್ಕೆ ಇಳಿದಿದ್ದಾರೆ. ಆದರೂ ಬಿಜೆಪಿ ರೈತ ಪರ ಸರ್ಕಾರ ಎಂದು ಕಿಡಿಕಾರಿದರು.

ರೈತರ ಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಪುತ್ರನನ್ನು ರಕ್ಷಿಸಲು ಕೇಂದ್ರ ಸರ್ಕಾರ ಹೊರಟಿದೆ. ನಾಲ್ವರು ರೈತರು ಮೃತಪಟ್ಟಿದ್ದರೂ ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.

ADVERTISEMENT

ಕೇಂದ್ರ ಸಚಿವ ಅಜಯ್ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು. ಬಿಜೆಪಿಯ ಮುಖಂಡರು ರೈತರ ಮೇಲಿನ ಹಲ್ಲೆಗಳನ್ನು ನಿಲ್ಲಿಸಬೇಕು. ರೈತರ ಹತ್ಯೆಗೆ ಬೇರೆ ರೀತಿಯ ಬಣ್ಣ ಬಳಿದು ಮುಚ್ಚಿ ಹಾಕುವ ಪ್ರಯತ್ನ ನಡೆಸಬಾರದು. ಇದರ ವಿರುದ್ಧ ಕಾಂಗ್ರೆಸ್‌ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮುಖಂಡರಾದ ಸಿ.ಎಸ್. ಚಂದ್ರಭೂಪಾಲ್, ದೇವೇಂದ್ರಪ್ಪ, ಎಸ್.ಪಿ. ಶೇಷಾದ್ರಿ, ವೈ.ಎಚ್. ನಾಗರಾಜ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮಧುಸೂದನ್, ಕೆ.ಚೇತನ್, ಬಾಲಾಜಿ, ಕಾಟಿಕೆರೆ ರವಿ, ರಂಗೇಗೌಡ, ಚಂದನ್, ಆರೀಫ್, ಪ್ರವೀಣ್ ಕುಮಾರ್, ಎಚ್.ಪಿ. ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.