ADVERTISEMENT

ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 10:53 IST
Last Updated 30 ಏಪ್ರಿಲ್ 2021, 10:53 IST
   

ಶಿವಮೊಗ್ಗ: ಭದ್ರಾವತಿ ನಗರಸಭೆ, ತೀರ್ಥಹಳ್ಳಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಮೊಳಗಿಸಿದೆ.

ಭದ್ರಾವತಿ ನಗರಸಭೆಯ 34 ಸ್ಥಾನಗಳಲ್ಲಿ ಕಾಂಗ್ರೆಸ್‌ 18, ಜೆಡಿಎಸ್‌ 11, ಬಿಜೆಪಿ 4 ಹಾಗೂ ಒಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಚುನಾವಣೆ ಘೋಷಣೆಗೂ ಮೊದಲು ನಡೆದಿದ್ದ ಕಬಡ್ಡಿ ಪಂದ್ಯಾವಳಿಯ ಗಲಾಟೆಯ ನಂತರ ಬಿಜೆಪಿಗೆ ಪರಿಸ್ಥಿತಿ ಅನುಕೂಲಕರವಾಗಿತ್ತು. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿತ್ತು.

ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲೆಯಲ್ಲಿ ದೊಡ್ಡ ಆಂದೋಲನವನ್ನೇ ನಡೆಸಿತ್ತು. ಹಾಗಾಗಿ, ನಗರಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು. ಕೊನೆಗೂ ಮತದಾರರು ಕಾಂಗ್ರೆಸ್‌ ಬೆಂಬಲಿಸಿರುವುದು ಫಲಿತಾಂಶದಿಂದ ಸ್ಪಷ್ಟವಾಗಿದೆ.

ADVERTISEMENT

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಗಳಲ್ಲಿ ಕಾಂಗ್ರೆಸ್ 9, ಬಿಜೆಪಿ 6 ಸ್ಥಾನ ಗಳಿಸಿವೆ. ಆ ಮೂಲಕ ಎರಡೂವರೆ ದಶಕಗಳ ಬಿಜೆಪಿ ಅಧಿಪತ್ಯ ಅಂತ್ಯಗೊಂಡಿದೆ. ಜೆಡಿಎಸ್‌ ತೊರೆದು ಈಚೆಗೆ ಕಾಂಗ್ರೆಸ್‌ ಸೇರಿದ ಸಹಕಾರಿ ಧುರೀಣ ಆರ್.ಎಂ.ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ ಅವರ ಒಗ್ಗಟ್ಟು ಕಾಂಗ್ರೆಸ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.