ಸಾಗರ: ತಾಲ್ಲೂಕಿನಲ್ಲಿ ಶನಿವಾರ ವರುಣನ ಆರ್ಭಟ ಮುಂದುವರಿದಿದ್ದು, ಭಾರಂಗಿ ಹೋಬಳಿಯ ಅರಳಗೋಡು ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಅಡಿಕೆ ತೋಟಗಳಿಗೆ ನೀರು ನುಗ್ಗಿದೆ.
ಆರೋಡಿ ಗ್ರಾಮದಲ್ಲಿ ಗುಡ್ಡ ಕುಸಿದು ತೋಟದಲ್ಲಿನ ಗಿಡಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಗ್ರಾಮದ ಬಂಗಾರಮ್ಮ, ಬಸವರಾಜ್, ಸೋಮಶೇಖರ್ ಅವರ ತೋಟಗಳಿಗೆ ಹಾನಿಯಾಗಿದೆ.ಮಂಡವಳ್ಳಿ ಗ್ರಾಮದ ಇಬ್ರಾಹಿಂ, ಶ್ರೀಕಾಂತ್, ಕುಬೇರಪ್ಪ, ನಂದೋಡಿ ಗ್ರಾಮದ ಗಿರಿ, ರಮಾನಂದ, ಮೂರ್ತಿ ಅವರ ತೋಟ, ಜಮೀನು, ಮನೆ, ಕೃಷಿಭೂಮಿಗೆ ಹೋಗುವ ರಸ್ತೆಗೆ ಹಾನಿ ಉಂಟಾಗಿದೆ. ನಂದೋಡಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿರುವುದರಿಂದ ಮೂರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದ್ದು, ತಾಳಗುಪ್ಪ ಹೋಬಳಿಯ ಹಲವು ಗ್ರಾಮಗಳಲ್ಲಿ ಭತ್ತದ ಗದ್ದೆಗಳಲ್ಲಿ ನಿಂತಿರುವ ನೀರಿನ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ.
ಜಿಲ್ಲಾ ಪಂಚಾಯಿತಿ ಸದಸ್ಯ ರಾಜಶೇಖರ ಗಾಳಿಪುರ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರಭಾವತಿ ಚಂದ್ರಕಾಂತ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.