ಭದ್ರಾವತಿ: ಸಹಕಾರ ಸಂಘಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಸಹಕಾರಿಗಳು ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಸಲಹೆನೀಡಿದರು.
ತರೀಕೆರೆ ರಸ್ತೆ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಬುಧವಾರ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಬ್ಯಾಂಕ್ ಹಮ್ಮಿಕೊಂಡಿದ್ದ 67ನೇ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಇಂದು ಸಹಕಾರ ಸಂಘಗಳ ಕಡೆ ಜನರ ಒಲವು ಹೆಚ್ಚಿದೆ. ಸಾಮಾನ್ಯರ ಪಾಲಿಗೆ ಸಹಕಾರ ಸಂಘಗಳು ಸಹಕಾರಿ ಎಂಬುದು ಮನವರಿಕೆಯಾಗಿದೆ ಎಂದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ‘ಏಷ್ಯಾ ಖಂಡದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸಹಕಾರ ಸಂಘ ಉದಯಿಸಿತ್ತು. ಸಹಕಾರ ಸಂಘಗಳು ಹೆಮ್ಮರವಾಗಿ ಬೆಳೆದು ನಿಂತಿರುವುದು ಮೆಚ್ಚುವ ಸಂಗತಿ’ ಎಂದರು.
ಸಹಕಾರ ಸಂಘದಿಂದ ಮಾತ್ರ ಅರ್ಥಿಕ ಸೌಲಭ್ಯ ಹಾಗೂ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ. ಜಿಲ್ಲೆಯಲ್ಲಿ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಭದ್ರಾವತಿ ತಾಲ್ಲೂಕು ಜಿಲ್ಲೆಯಲ್ಲಿ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎಚ್.ಎಲ್. ಷಡಾಕ್ಷರಿ, ಗೊಂದಿ ಜಯರಾಮ್, ಎಚ್.ಎಸ್. ಸಂಜೀವಕುಮಾರ್, ಟಿ.ಎಸ್. ದುಗ್ಗೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೃಷ್ಣಪ್ಪ, ರಾಮ್ಕೋಸ್ ಅಧ್ಯಕ್ಷ ಸಿ. ಮಲ್ಲೇಶಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಲೋಕೇಶ್, ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷ ಜಿ.ಎಂ. ಸೋಮಶೇಖರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.