ADVERTISEMENT

ಕೋವಿಡ್: ಸಜ್ಜಾದ ಸಾಗರದ ಆಸ್ಪತ್ರೆ, ಶೀಘ್ರ ಕಾರ್ಯಾರಂಭದ ನಿರೀಕ್ಷೆ

ಆಸ್ಪತ್ರೆಗೆ ಆರ್‌ಟಿಪಿಸಿಆರ್ ಪ್ರಯೋಗಾಲಯ

ಎಂ.ರಾಘವೇಂದ್ರ
Published 28 ಸೆಪ್ಟೆಂಬರ್ 2021, 3:05 IST
Last Updated 28 ಸೆಪ್ಟೆಂಬರ್ 2021, 3:05 IST
ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ
ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ   

ಸಾಗರ: ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ್ದ ತಾಲ್ಲೂಕಿನ ಜನರು ಇನ್ನೂ ಆ ಕರಾಳ ನೆನಪುಗಳ ಗುಂಗಿನಿಂದ ಹೊರಬಂದಿಲ್ಲ. ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳು ಇಂದಿಗೂ ನೆಮ್ಮದಿ ಕಳೆದುಕೊಂಡಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದುಬಾರಿ ವೆಚ್ಚ ತುಂಬಿ ಗುಣಮುಖರಾಗಿ ಬಂದವರ ಗೋಳು ಕೂಡ ಹೇಳತೀರದು.

ಈ ನಡುವೆ ಕೋವಿಡ್ ಮೂರನೇ ಅಲೆ ಮತ್ತೆ ಬರುತ್ತದೆಯೇ ಎಂಬ ಆತಂಕದ ನಡುವೆ ಅದನ್ನು ಎದುರಿಸಲು ತಾಲ್ಲೂಕು ಆಡಳಿತ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಸೋಂಕಿನ ಪ್ರಮಾಣ ತೀರಾ ಕಡಿಮೆ ಇದ್ದು, ರೋಗ ಲಕ್ಷಣ ಅತಿಯಾಗಿ ಕಾಣಿಸಿಕೊಳ್ಳದೇ ಇದ್ದ ರೋಗಿಗಳಿಗೆ ಮಾತ್ರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ರೋಗಿಗಳನ್ನು ದೊಡ್ಡ ದೊಡ್ಡ ನಗರ ಪ್ರದೇಶದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿತ್ತು.

ADVERTISEMENT

ಇದೀಗ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸಲು ಹಲವು ಹೊಸ ಸೌಲಭ್ಯಗಳು ಬರುತ್ತಿವೆ.

ಪ್ರಸ್ತುತ ಕೋವಿಡ್ ಪರೀಕ್ಷೆ ಮಾಡಿಸಿದವರ ಗಂಟಲ ದ್ರವವನ್ನು ಶಿವಮೊಗ್ಗದ ಪ್ರಯೋಗಾಯಲಕ್ಕೆ ಕಳುಹಿಸಿ ಫಲಿತಾಂಶ ಬರಲು 3ರಿಂದ 4 ದಿನ ಹಿಡಿಯುತ್ತಿದೆ. ಇದೀಗ ಸರ್ಕಾರ ಇಲ್ಲಿನ ಆಸ್ಪತ್ರೆಗೆ ಆರ್‌ಟಿಪಿಸಿಆರ್ ಪ್ರಯೋಗಾಲಯ ಮಂಜೂರು ಮಾಡಿದ್ದು, ಶೀಘ್ರ ಅದು ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಿನ ರೋಗಿಗಳನ್ನು ಬೇರೆ ಊರಿನ ಆಸ್ಪತ್ರೆಗೆ ಕಳುಹಿಸಲು ಮುಖ್ಯ ಕಾರಣವಾದ ಸಂಗತಿಯೆಂದರೆ ಆಮ್ಲಜನಕ ಕೊರತೆ.

ಇದೀಗ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲೇ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸಲು ಸಿದ್ಧತೆ ನಡೆದಿದೆ. 4 ಸಾವಿರ ಲೀಟರ್‌ನಷ್ಟು ಆಮ್ಲಜನಕ ಸಂಗ್ರಹಿಸಿಡುವ ಘಟಕ ಇಲ್ಲಿ ಸಜ್ಜುಗೊಳ್ಳುತ್ತಿದೆ.

ಕೋವಿಡ್ ರೋಗಿಗಳು ರಕ್ತಕ್ಕೆ ಸಂಬಂಧಪಟ್ಟ ವಿವಿಧ ಪರೀಕ್ಷೆಗಳಿಗಾಗಿ ಖಾಸಗಿ ಪ್ರಯೋಗಾಲಯಗಳಿಗೆ ಹೆಚ್ಚಿನ ಹಣ ಪಾವತಿಸಬೇಕಿತ್ತು. ಎಲ್ಲಾ ಪರೀಕ್ಷೆಗಳನ್ನು ನಡೆಸುವ ಎರಡು ಹೊಸ ಯಂತ್ರಗಳು ಬಂದಿವೆ ಎನ್ನುತ್ತಾರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್.ಮೋಹನ್.

ಸದ್ಯಕ್ಕೆ ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟಿವ್ ದರ ಶೇ 1ರಷ್ಟು ಮಾತ್ರವಿದೆ. ಈ ನಡುವೆ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧದ ಕೊರತೆ ಸ್ವಲ್ಪಮಟ್ಟಿಗೆ ಕಾಣಿಸಿಕೊಂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಈ ಕೊರತೆ ನಿವಾರಣೆಯಾಗಲಿದೆ ಎಂಬ ವಿಶ್ವಾಸ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಬೋಸ್ಲೆ ಅವರದ್ದು.

ಮಕ್ಕಳ ಉಸಿರಾಟದ ಸಮಸ್ಯೆಯನ್ನು ನೀಗಿಸುವ ಸಲುವಾಗಿ ಸಿ ಪ್ಯಾಪ್ ಯಂತ್ರಗಳನ್ನು ತರಿಸಿಕೊಳ್ಳಲು ಆಸ್ಪತ್ರೆ ಮುಂದಾಗಿದೆ.ಮುಂಜಾಗ್ರತೆ ಕ್ರಮವಾಗಿ ಕೇರಳದಿಂದ ಇಲ್ಲಿಗೆ ಬರುವವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಕೋವಿಡ್ ಆರೈಕೆ ಕೇಂದ್ರಗಳನ್ನು ತಕ್ಷಣ ಆರಂಭಿಸಲು ಕೂಡ ಆರೋಗ್ಯ ಇಲಾಖೆ ಸಿದ್ಧವಿದೆ.

*
ರಕ್ತ ಹಾಗೂ ಯಕೃತ್ತಿಗೆ ಸಂಬಂಧಪಟ್ಟ ಎಲ್ಲಾ ಪರೀಕ್ಷೆಗಳನ್ನು ನಡೆಸುವ ಎರಡು ಹೊಸ ಯಂತ್ರಗಳು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬಂದಿವೆ.
–ಡಾ.ಕೆ.ಎಸ್.ಮೋಹನ್,ತಾಲ್ಲೂಕು ಆರೋಗ್ಯಾಧಿಕಾರಿ

*
ಸಂಭಾವ್ಯ ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಕಾಡಬಹುದು ಎಂಬ ಕಾರಣಕ್ಕೆ ಮಕ್ಕಳಿಗಾಗಿಯೇ ಆಮ್ಲಜನಕ ಸಮೇತ 15 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಅನ್ನು ಆಸ್ಪತ್ರೆಯಲ್ಲಿ ಸಿದ್ಧಗೊಳಿಸಲಾಗಿದೆ.
–ಡಾ. ಪ್ರಕಾಶ್ ಬೋಸ್ಲೆ, ‌ವೈದ್ಯಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.