ಶಿವಮೊಗ್ಗ: ‘ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಜನ್ಮದಿನ ಆಚರಿಸಿಕೊಂಡ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ವಿರುದ್ಧ ಕ್ರಮ
ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿತ್ಯ ಹೆಚ್ಚಾಗುತ್ತಿವೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ, ಶಾಸಕ ಕೆ.ಬಿ. ಅಶೋಕ್ ನಾಯ್ಕ ಅವರು ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು
ದೂರಿದರು.
ಸವಳಂಗ ರಸ್ತೆಯಲ್ಲಿರುವ ಅಕ್ಷರ ಶಿಕ್ಷಣ ಸಂಸ್ಥೆಯಲ್ಲಿ ಫೌಂಡರ್ಸ್ ಡೇ ಹೆಸರಿನಲ್ಲಿ ಜನ್ಮದಿನಾಚರಣೆ ನಡೆದಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದ್ದರೂ ಶಾಲೆಗೆ ಮಕ್ಕಳನ್ನು ಕರೆಸಿಕೊಂಡು ನೃತ್ಯಮಾಡಿಕುಪ್ಪಳಿಸಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡುವ ಸಾಧ್ಯತೆ ಇದೆ. ಶಾಸಕರು ತಮ್ಮ ಜವಾಬ್ದಾರಿ ಮರೆತು ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎನ್ಎಸ್ಯುಐ ಮುಖಂಡರಾದ ಚೇತನ್, ಮಧುಸೂದನ್, ರವಿಕುಮಾರ್, ವಿಕ್ರಂ, ಸುಹಾಸ್, ವಿಜಯ್ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.