ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ವಾರಾಂತ್ಯದ ಲಾಕ್ಡೌನ್ಗೆ ಎರಡು ದಿನ ಬಾಕಿ ಇರುವಾಗಲೇ ಎಲ್ಲ ಅಂಗಡಿಗಳನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ಬಂದ್ ಮಾಡಿಸಲಾಯಿತು.
ಪ್ರತಿ ದಿನವೂ ನೂರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಸಾವಿನ ಸಂಖ್ಯೆಯೂ 358ಕ್ಕೆ ಏರಿದೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಹಾಗಾಗಿ, ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರಮುಖ ರಸ್ತೆಗಳು, ವೃತ್ತ, ಮಾರುಕಟ್ಟೆ, ವಾಣಿಜ್ಯ ಕೇಂದ್ರಗಳನ್ನು ಮಧ್ಯಾಹ್ನದ ವೇಳೆಗೆ ದಿಢೀರ್ ಮುಚ್ಚಿಸಿದ ಪರಿಣಾಮ ಬಂದ್ ವಾತಾವರಣ ನಿರ್ಮಾಣವಾಗಿತ್ತು.
ಬೆಳಿಗ್ಗೆಯಿಂದ ಜನರಿಂದ ಗಿಜಿಗುಡುತ್ತಿದ್ದ ನಗರದ ಪ್ರಮುಖ ವಾಣಿಜ್ಯ ಕೇಂದ್ರ ಗಾಂಧಿಬಜಾರ್ ಸಂಜೆ ನಿರ್ಜನ ಪ್ರದೇಶದಂತೆ ಕಾಣುತ್ತಿತ್ತು. ಕರ್ಫ್ಯೂ ಸಮಯದ ವಾತಾವರಣ ನಿರ್ಮಾಣವಾಗಿತ್ತು. ಪ್ರಮುಖ ರಸ್ತೆಗಳ ಸಂಚಾರವನ್ನೂ ಬಂದ್ ಮಾಡಿಸಲಾಯಿತು. ಬಹುತೇಕ ರಸ್ತೆಗಳು ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿದ್ದವು.
ಯಾವ ಸೂಚನೆಯನ್ನೂ ನೀಡದೆ ಏಕಾಏಕಿ ಪೊಲೀಸರು ರಸ್ತೆಗಿಳಿದು ಅಂಗಡಿಗಳ ಬಾಗಿಲು ಮುಚ್ಚುವಂತೆ ವರ್ತಕರಿಗೆ ಸೂಚಿಸಿದಾಗ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದರು. ‘ಕೋವಿಡ್ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿರೋಧಿಸಿದರೆ ಸಂಕಷ್ಟ ಎದುರಾಗಲಿದೆ’ ಎಂದು ಎಚ್ಚರಿಕೆ ನೀಡಿದರು.
ಕೋವಿಡ್–19 ಮಾರ್ಗಸೂಚಿ ಪಾಲಿಸಿಕೊಂಡು ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರವೇ ಅವಕಾಶ ನೀಡಿದೆ. ಆದರೆ, ನಗರದಲ್ಲಿ ಅಧಿಕಾರಿಗಳು ದಿಢೀರ್ ಅಂಗಡಿಗಳನ್ನು ಮುಚ್ಚಿಸಿ, ವಹಿವಾಟು ಬಂದ್ ಮಾಡಿಸಿದ್ದಕ್ಕೆ ವರ್ತಕರು ಅಸಮಾಧಾನ ವ್ಯಕ್ತಪಡಿಸಿದರು.
ಹೊಸ ಕೊರೊನಾ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟ ಸಲೂನ್, ವೈನ್ಶಾಪ್ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಯಿತು.
‘ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರ ವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಅದಕ್ಕೂ ಮುನ್ನ ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವ ಸಿದ್ಧತೆಯಲ್ಲಿದ್ದರು. ವಾಪಾರಸ್ಥರೂ ಅಲ್ಪಸ್ವಲ್ಪ ವ್ಯಾಪಾರ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಅಂಗಡಿ ಮುಚ್ಚಿಸಿದರು. ಯಾವುದೇ ಮುನ್ಸೂಚನೆ ನೀಡದೆ ತೊಂದರೆ ನೀಡಿದರು’ ಎಂದು ವರ್ತಕರೊಬ್ಬರು ಅಳಲು ತೋಡಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.