ಶಿವಮೊಗ್ಗ: ಸಾಗರ ರಸ್ತೆಯ ಅಟೊಕಾಂಪ್ಲೆಕ್ಸ್ ನಿರ್ವಹಣೆಯ ಹೊಣೆಗಾರಿಕೆಯನ್ನು ನಗರ ಪಾಲಿಕೆಗೆ ಹಸ್ತಾಂತರಿಸಲು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅನುಮೋದನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಹಸ್ತಾಂತರ ನಿರ್ಧಾರ ಪ್ರಕಟಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ 19 ಎಕರೆ ಪ್ರದೇಶದಲ್ಲಿ ಹಿಂದೆ ನಿರ್ಮಿಸಿದ್ದ ಈ ಆಟೊಕಾಂಪ್ಲೆಕ್ಸ್ ಮೂಲಸೌಕರ್ಯಗಳಿಲ್ಲದೆ ಸೊರಗಿತ್ತು. ಅಲ್ಲಿನ ವರ್ತಕರು ಹಲವು ಬಾರಿ ಪ್ರತಿಭಟನೆಯನ್ನೂ ನಡೆಸಿದ್ದರು. ಅಟೋ ಕಾಂಪ್ಲೆಕ್ಸ್ನಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ನೀರು ಪೂರೈಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ದೇವಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಸೌಕರ್ಯ ಒದಗಿಸುವ ಕಾಮಗಾರಿ ತ್ವರಿತಗೊಳಿಸಬೇಕು. ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದ 10ದಿನಗಳ ಒಳಗೆ ಸಂಪರ್ಕ ಕಲ್ಪಿಸಬೇಕು. ಅಲ್ಕೊಳ ಉಪ ವಿತರಣಾ ಕೇಂದ್ರದಿಂದ ಮುದ್ದಿನಕೊಪ್ಪ ತಿರುವಿನವರೆಗೂ ಯುಜಿ ಕೇಬಲ್ ಅಳವಡಿಕೆ ಕಾರ್ಯ ಆರಂಭಿಸಬೇಕು. ಮುದ್ದಿನಕೊಪ್ಪ ತಿರುವಿನಿಂದ ಕೈಗಾರಿಕಾ ಪ್ರದೇಶದವರೆಗೆ ಕಂಬಗಳ ಮುಖಾಂತರ ಎಕ್ಸ್ಪ್ರೆಸ್ ಫೀಡರ್ ಎಳೆಯುವ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರತ್ಯೇಕ ಪ್ರಾಧಿಕಾರ: ಶಿವಮೊಗ್ಗದ ಮಾಚೇನಹಳ್ಳಿ-, ನಿಧಿಗೆ ಕೈಗಾರಿಕಾ ಪ್ರದೇಶಗಳನ್ನು ಒಟ್ಟಿಗೆ ಸೇರಿಸಿ ಪ್ರತ್ಯೇಕ ಕೈಗಾರಿಕಾ ನಗರ ಪ್ರಾಧಿಕಾರ ಸ್ಥಾಪನೆ ಮಾಡುವ ಪ್ರಸ್ತಾವ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪ್ರತ್ಯೇಕ ಪ್ರಾಧಿಕಾರ ರಚನೆ ಬಳಿಕ ಘನತ್ಯಾಜ್ಯಗಳ ವಿಲೇವಾರಿಗೆ ವೈಜ್ಞಾನಿಕ ಕ್ರಮ ಅಳವಡಿಸಬೇಕು ಎಂದು ತಿಳಿಸಿದರು.
ಪಾಲಿಕೆ ಅಧಿಕಾರಿಗಳ ಗೈರಿಗೆ ಆಕ್ಷೇಪ:ಕೈಗಾರಿಕಾ ವಲಯದ ಸಭೆಗಳಿಗೆ ನಗರ ಪಾಲಿಕೆ ಅಧಿಕಾರಿಗಳು ಬರುವುದಿಲ್ಲ. ಇದರಿಂದ ಹಲವು ಕಾರ್ಯಗಳ ಜಾರಿ ವಿಳಂಬವಾಗುತ್ತಿದೆ ಎಂದು ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಒತ್ತಾಯಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್, ಹೆಚ್ಚುವರಿ ನಿರ್ದೇಶಕ ಸತೀಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.