ಶಿವಮೊಗ್ಗ: ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕೊಳಚೆ ನಿರ್ಮೂಲನೆ ಮಂಡಳಿಯ ಮೂಲಕ ಅನುಷ್ಠಾನ ಗೊಳಿಸಲಾಗು ತ್ತಿರುವ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಬ್ಯಾಂಕ್ನಿಂದ ಮತ್ತು ಮಂಡಳಿಯಿಂದ ಹಣಕಾಸು ನೆರವು ನೀಡುವ ಕುರಿತು ಕ್ರಮ ಕೈಗೊಳ್ಳ ಬೇಕು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿ ಗೊಳಿಸಲಾಗುತ್ತಿರುವ ಯೋಜನೆಗಳ ಮಾಹಿತಿ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಉದ್ಯೋ ಗಾವಕಾಶ ಕಲ್ಪಿಸಲು ಪೂರಕವಾಗಿ ಕೌಶಲಾಭಿವೃದ್ಧಿ ತರಬೇತಿ, ವಸತಿ ಯೋಜನೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ ಸೇರಿ ವಿವಿಧ ಇಲಾಖೆಗಳ ಸೌಲಭ್ಯಗಳು, ಕೈಗಾರಿಕೆ, ಬ್ಯಾಂಕ್ಗಳ ಮೂಲಕ ಹಣಕಾಸು ನೆರವು, ಎನ್ಯುಎಲ್ಎಂ, ಎನ್ಆರ್ಎಲ್ಎಂ ಸೇರಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 2,70,949 ಅಲ್ಪಸಂಖ್ಯಾತರಿದ್ದು, ಇವರಲ್ಲಿ 2,34,664 ಮುಸ್ಲಿಮರು, 26,531 ಕ್ರಿಶ್ಚಿಯನ್ನರು, 9,234 ಜೈನರು, 400 ಸಿಖ್ಖರು ಮತ್ತು 120 ಬೌದ್ಧ ಧರ್ಮೀಯರು ಇದ್ದಾರೆ. ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಜಿಲ್ಲೆಯಲ್ಲಿ 2,298 ಬಾಣಂತಿಯರಿಗೆ ಹಾಗೂ 2,653 ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಲಾಗಿದೆ. ಈ ಅವಧಿಯಲ್ಲಿ ಶಾಲೆಯಿಂದ ಹೊರಗುಳಿದಿರುವ 9 ಮಕ್ಕಳನ್ನು ಗುರುತಿಸಲಾಗಿದ್ದು, ಅವರನ್ನು ಮರಳಿ ಶಾಲೆಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.