ಶಿವಮೊಗ್ಗ: ಜಿಲ್ಲೆಯಲ್ಲಿ ಜೂನ್ 27ರಿಂದ ಜುಲೈ 4ವರೆಗೆ ಒಟ್ಟು 12 ಕೇಂದ್ರಗಳಲ್ಲಿ ಬೆಳಿಗ್ಗೆ 10.30ರಿಂದ ಸಂಜೆ 4ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.
‘ಶಿವಮೊಗ್ಗ ತಾಲ್ಲೂಕಿನಲ್ಲಿ 4, ಭದ್ರಾವತಿಯಲ್ಲಿ 2, ಶಿಕಾರಿಪುರ 2 ಹಾಗೂ ಹೊಸನಗರ, ಸಾಗರ, ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ತಲಾ ಒಂದು ಕೇಂದ್ರಗಳು ಸೇರಿ ಒಟ್ಟು 12 ಕೇಂದ್ರಗಳಲ್ಲಿ 2,860 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ಕುರಿತು ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಿರುವ ಕೊಠಡಿ, ಆಸನ, ಪೀಠೋಪಕರಣ, ಗಾಳಿ, ಬೆಳಕು, ನೀರು, ಶೌಚಾಲಯ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಪರೀಕ್ಷೆಗಳು ಸುಗಮವಾಗಿ ನಡೆಯಲು ಉಸ್ತುವಾರಿಗಾಗಿ, ವೀಕ್ಷಕರಾಗಿ, ಮಾರ್ಗಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು. ಪ್ರತಿ ಕೇಂದ್ರಕ್ಕೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸಮೀಪ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿ ಪರೀಕ್ಷಾರ್ಥಿಯು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೇಂದ್ರಕ್ಕೆ ಬರುವ ಪ್ರತಿ ವಿದ್ಯಾರ್ಥಿಯ ತಪಾಸಣೆಗೆ ಪ್ರತಿ ಕೇಂದ್ರಕ್ಕೂ ಎ.ಎನ್.ಎಂ, ಥರ್ಮಲ್ ಸ್ಕ್ಯಾನಿಂಗ್, ಪ್ರಥಮ ಚಿಕಿತ್ಸಾ ಸಲಕರಣೆಗಳನ್ನು ಒದಗಿಸಿ ಎಂದು ಆರೋಗ್ಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅವಕಾಶವಿದ್ದು, ಯೋಜನೆಯ ಲಾಭ ಪಡೆದುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಆಸ್ತಿ ಕುರಿತು ವಿವಾದಗಳಿಗೆ ಅವಕಾಶವಿಲ್ಲದಂತೆ ಎಚ್ಚರವಹಿಸಬೇಕು. ಸಾಮಾನ್ಯದಿಂದ ಗಂಭೀರ ಸ್ವರೂಪದ ಪ್ರಕರಣಗಳಿದ್ದಲ್ಲಿ ಇಲಾಖಾ ಮುಖ್ಯಸ್ಥರು ಹಾಗೂ ಜಿಲ್ಲಾಡಳಿತದ ಗಮನ ಸೆಳೆಯಬೇಕು ಎಂದು ಸಲಹೆ ನೀಡಿದರು.
ಈ ಸಂಬಂಧ ಕಂದಾಯ ಇಲಾಖೆಯ ದಿಶಾಂಕ್ ಆ್ಯಪ್ ತಂತ್ರಾಂಶ ಅಭಿವೃದ್ಧಿಪಡಿಸಿದ್ದು, ಆಯಾ ಶಾಲಾ ಶಿಕ್ಷಕರು ತಂತ್ರಾಂಶದಲ್ಲಿ ತಮ್ಮ ಶಾಲೆಯ ದಾಖಲೆಗಳು ಸರಿಯಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಪೂರಕ ದಾಖಲೆಗಳನ್ನು ಸಲ್ಲಿಸಿ ಸರಿಪಡಿಸಿಕೊಳ್ಳುವಂತೆಯೂ ಸಲಹೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಹೆಚ್.ಎಸ್.ಸಾವಿತ್ರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.