ಶಿವಮೊಗ್ಗ: ಜಿಲ್ಲೆಯಲ್ಲಿರುವ ಸಫಾಯಿ ಕರ್ಮಚಾರಿಗಳನ್ನು ಗುರುತಿಸಲು ಮಾರ್ಚ್ 15ರಿಂದ ಸಮೀಕ್ಷೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ನಗರ ಪ್ರದೇಶಗಳಲ್ಲಿ ಎರಡು, ಗ್ರಾಮೀಣ ಪ್ರದೇಶದಲ್ಲಿ ಒಂದು ತಿಂಗಳು ಸಮೀಕ್ಷೆ ನಡೆಯಲಿದೆ. ಒಂದೇ ಬಾರಿಗೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು. ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ರಚಿಸಬೇಕು. ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಕಾರ್ಯದರ್ಶಿ ನೇತೃತ್ವದಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಬಹುದು. ಸಮಗ್ರವಾಗಿ ಸಮೀಕ್ಷೆ ನಡೆಸಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ನಿಖರ ವರದಿ ಸಲ್ಲಿಸಬೇಕು. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾ ಮಟ್ಟದಲ್ಲಿ ರಚಿಸಿದ ಸಮಿತಿ ಮಾದರಿಯಲ್ಲಿ ತಾಲ್ಲೂಕುಮಟ್ಟದಲ್ಲಿಯೂ ಸಮಿತಿ ರಚಿಸಬೇಕು ಎಂದರು.
ಮಾನವನ ಮಲಮೂತ್ರವನ್ನು ಯಾವುದೇ ಸಾಧನ ಸಲಕರಣೆಗಳ ಸಹಾಯವಿಲ್ಲದೆ ತೆಗೆದು ಹಾಕುವ ಕಾರ್ಯದಲ್ಲಿ ಹಿಂದೆ ಹಲವರು ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರ ಇಂತಹ ಪದ್ಧತಿ ನಿಷೇಧಿಸಲಾಗಿದೆ. ಅಂತಿಮ ಪಟ್ಟಿ ಪ್ರಕಟಿಸಿದ ಬಳಿಕ ಅಂತಹ ವ್ಯಕ್ತಿಗಳನ್ನು ಮಲ ಹೊರುವ ಜಾಡ ಮಾಲಿ ಕೆಲಸದ ಹೊಣೆಗಾರಿಕೆಯಿಂದ ಸಂಪೂರ್ಣ ಮುಕ್ತಗೊಳಿಸಲಾಗುವುದು ಎಂದು ವಿವರ ನೀಡಿದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ನಾಗರಾಜ್, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.