ADVERTISEMENT

ಡಿಸಿಸಿ ಬ್ಯಾಂಕ್ ಹಗರಣ: ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 30 ಮೇ 2020, 12:49 IST
Last Updated 30 ಮೇ 2020, 12:49 IST

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಗಾಂಧಿ ಬಜಾರ್ ಶಾಖೆಯಲ್ಲಿ 6 ವರ್ಷಗಳ ಹಿಂದೆ ನಡೆದ ಬಂಗಾರ ಅಡಮಾನ ಸಾಲ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಸರ್ಕಾರವನ್ನು ಕೋರಲು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಧರಿಸಲಾಯಿತು.

ಬ್ಯಾಂಕ್‌ನ ವ್ಯವಸ್ಥಾಪಕಿ ಮತ್ತು ಇತರೆ ಆರೋಪಿಗಳು ಸೇರಿ ನಕಲಿ ಬಂಗಾರ ಇಟ್ಟು ₹ 62.77 ಕೋಟಿ ವಂಚಿಸಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡರಿಗೆ ಕ್ಲೀನ್‌ಚಿಟ್ ನೀಡಿತ್ತು.

ಬ್ಯಾಂಕ್‌ ಅಧ್ಯಕ್ಷರನ್ನು ರಕ್ಷಿಸಲು ಅಂದಿನ ಕಾಂಗ್ರೆಸ್‌ ಸರ್ಕಾರ ಸಿಐಡಿ ಬಳಸಿಕೊಂಡಿತ್ತು. ಜೂನ್ 1ರಂದು ಸಹಕಾರಿ ಸಚಿವ ಎಸ್‌.ಟಿ.ಸೋಮಶೇಖರ್ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಪ್ರಕರಣ ಕುರಿತು ಅವರಿಗೂ ಮನವರಿಕೆ ಮಾಡಲಾಗುವುದು. ರೈತರ ಹಣ ದುರುಪಯೋಗವಾಗಲು ಬಿಡುವುದಿಲ್ಲ ಎಂದು ಸಚಿವ ಈಶ್ವರಪ್ಪ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ADVERTISEMENT

ಗೊಂದಲ ಬಗೆಹರಿಸಿಕೊಳ್ಳುವೆವು:ಉತ್ತರ ಕರ್ನಾಟಕದ ಶಾಸಕರು ಸಭೆ ನಡೆಸಿದ ವಿಚಾರವನ್ನು ಪಕ್ಷದ ಮುಖಂಡರು ಕುಳಿತು ಚರ್ಚಿಸುವರು. ಕೆಲವರಿಗೆ ಅಸಮಾಧಾನ ಇರುವುದು ನಿಜ. ಗೊಂದಲ ಬಗೆಹರಿಸಿಕೊಳ್ಳುತ್ತೇವೆ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.