ವಿಜಯೇಂದ್ರ
(ಸಂಗ್ರಹ ಚಿತ್ರ)
ಶಿವಮೊಗ್ಗ: ‘ನವದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ ಕಾರ್ ಸ್ಫೋಟ ಘಟನೆಯು ಭಯೋತ್ಪಾದಕರ ದಾಳಿ ಎಂಬುದು ನಿಚ್ಚಳವಾಗಿದೆ. ಆದರೆ, ಕೀಳುಮಟ್ಟದ ರಾಜಕೀಯ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಮುಖಂಡರು ಈಗಲೂ ಅದನ್ನೇ ಮುಂದುವರಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
’ಈ ಘಟನೆಯಿಂದ ದೇಶವೇ ತಲ್ಲಣಗೊಂಡಿದೆ. ಇಂಥ ವೇಳೆ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ, ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ’ ಎಂದು ಗುರುವಾರ ಸುದ್ದಿಗಾರರೆದುರು ಆಕ್ರೋಶ ವ್ಯಕ್ತಪಡಿಸಿದರು.
‘ಸ್ಫೋಟಕ್ಕೂ ಬಿಹಾರ ಚುನಾವಣೆಗೂ ಏನು ಸಂಬಂಧ? ಕಾಂಗ್ರೆಸ್ ನಾಯಕರು ಸೂಕ್ಷ್ಮತೆ ಯಿಂದ ವರ್ತಿಸಲಿ. ಉಗ್ರರಿಗೆ ಇಂಬು ನೀಡುವಂತೆ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕು’ ಎಂದರು.
ಸ್ಪೋಟದಲ್ಲಿ ಮೃತಪಟ್ಟವರ ಜೀವದ ಮಹತ್ವ ಅರಿಯದವರಂತೆ ಕಾಂಗ್ರೆಸ್ನವರು ಮಾತನಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸ್ಫೋಟದ ಬಗ್ಗೆ ರಾಹುಲ್ ಗಾಂಧಿ ಒಂದು ಹೇಳಿಕೆಯನ್ನು ನೀಡಿಲ್ಲ ಏಕೆ? ಎಂದು ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.