
ಶಿವಮೊಗ್ಗ: ‘ಪರಿಸರ ಸಂರಕ್ಷಣೆ, ನಗರವನ್ನು ಸುಂದರ ಹಾಗೂ ಹಸಿರಾಗಿಸುವ ಉದ್ದೇಶದಿಂದ ₹43 ಕೋಟಿ ವೆಚ್ಚದಲ್ಲಿ 15 ಕೆರೆಗಳನ್ನು ಸೂಡಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.
ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿ ಬುಧವಾರ ಆಲ್ಕೊಳ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಮಾಹಿತಿ ಹಂಚಿಕೊಂಡು ಮಾತನಾಡಿದರು.
‘ಕೆರೆಯಲ್ಲಿ ಹೂಳು ತೆಗೆಸಿ, ಸುತ್ತಲೂ ಬೇಲಿ ಹಾಕಿಸಿ, ಬಂಡಿಂಗ್ ಮಾಡುವುದು, ಜೊತೆಗೆ ಕೆರೆ ಸುತ್ತಲೂ ಗಿಡ ನೆಡಲಾಗುವುದು. ಮಕ್ಕಳಿಗೆ ಆಟಿಕೆ ಸಾಮಗ್ರಿಗಳನ್ನು ಅಳವಡಿಸಲಾಗುವುದು. ಚರಂಡಿ ನೀರು ಕೆರೆಗಳಿಗೆ ಬರುವುದನ್ನು ತಪ್ಪಿಸಲು ಕ್ರಮ ವಹಿಸಲಾಗುವುದು. ಕೆಲವು ಕೆರೆಗಳನ್ನು ದ್ವೀಪದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಕೆರೆಗಳ ಅಭಿವೃದ್ಧಿಯಿಂದ ಪರಿಸರ ಸಂರಕ್ಷಣೆಯೊಂದಿಗೆ ಅಂತರ್ಜಲ ಮಟ್ಟವೂ ಹೆಚ್ಚಲಿದೆ. ವಾತಾವರಣವೂ ಉತ್ತಮವಾಗಿರಲಿದೆ’ ಎಂದು ತಿಳಿಸಿದರು.
‘ಸೂಡಾದಿಂದ ಕೈಗೊಳ್ಳಲು ಉದ್ದೇಶಿಸಿರುವ ಪ್ರಾಧಿಕಾರ ಮಾಲೀಕತ್ವದ ನಿದಿಗೆಯ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆಯ ಅಭಿವೃದ್ಧಿ ಕಾಮಗಾರಿಯ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲು ಆಯುಕ್ತಾಲಯಕ್ಕೆ ಸಲ್ಲಿಸಲಾಗಿದೆ. ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಇಲಾಖೆಗೆ ಸಲ್ಲಿಸಲಾಗಿದೆ’ ಎಂದರು.
‘ನಿದಿಗೆ ಹೋಬಳಿ ಊರಗಡೂರು ಗ್ರಾಮದ ಉದ್ದೇಶಿತ ವಸತಿ ಬಡಾವಣೆಯಲ್ಲಿ ಸುಮಾರು 4 ಎಕರೆ ವಿಸ್ತೀರ್ಣದಲ್ಲಿ ವಸತಿ ಸಮುಚ್ಛಯ ನಿರ್ಮಾಣ ಸಂಬಂಧ ಪೂರ್ವಾನುಮತಿಗೆ ಆಯುಕ್ತಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಭದ್ರಾವತಿ ತಾಲ್ಲೂಕಿನ ಕಸಬಾ ಗ್ರಾಮದಲ್ಲಿ ಒಟ್ಟು 32 ಎಕರೆ 21 ಗುಂಟೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸಲು ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಪಡೆಯಲು ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ಈ ವೇಳೆ ಸ್ಥಳೀಯ ಜನ ಪ್ರತಿನಿಧಿಗಳು, ಬಡಾವಣೆ ನಿವಾಸಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.