
ಸಾಗರ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಕ್ಷೇತ್ರದ ಬಗ್ಗೆ ತಪ್ಪು ಅಭಿಪ್ರಾಯ ಮೂಡುವಂತೆ ಕಾರ್ಯ ಚಟುವಟಿಕೆ ನಡೆಸಿದವರನ್ನು ಬಂಧಿಸುವಂತೆ ಒತ್ತಾಯಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ಸಮಿತಿಯ ಪ್ರಮುಖರು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
‘ಧರ್ಮಸ್ಥಳ ಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ ಬುರುಡೆ ಗ್ಯಾಂಗ್ನ ಆರು ಜನರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹರಡಿದ ಯೂಟ್ಯೂಬರ್ ಸಮೀರ್ ವಿರುದ್ಧವೂ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
‘ಧರ್ಮಸ್ಥಳ ಕ್ಷೇತ್ರಕ್ಕೆ ಶ್ರದ್ಧಾ ಭಕ್ತಿಯಿಂದ ನಡೆದುಕೊಳ್ಳುವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
‘ಸಾಗರದ ಮಾರಿಕಾಂಬಾ ಜಾತ್ರೆಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಕರೂರು-ಭಾರಂಗಿ ಹೋಬಳಿಗಳ ಸಂಪರ್ಕ ಸೇತುವೆಯಾಗಿರುವ ಮುಪ್ಪಾನೆಯಲ್ಲಿ ಲಾಂಚ್ ಸೇವೆ ಬದಲು ಸೇತುವೆ ನಿರ್ಮಿಸಬೇಕು’ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ನಾಗರಿಕ ಹಿತರಕ್ಷಣಾ ಸಮಿತಿಯ ಪ್ರಮುಖರಾದ ಎಸ್.ವಿ.ಹಿತಕರ ಜೈನ್, ದೇವೇಂದ್ರಪ್ಪ, ಸುಂದರ್ ಸಿಂಗ್, ಸಂತೋಷ್ ಆರ್.ಶೇಟ್, ಸತೀಶ್ ಮೊಗವೀರ, ಲತಾ ಜೈನ್, ಬೋಜರಾಜ್, ಮಹಾಬಲೇಶ್ವರ, ರೂಪಾ, ಶಿವಶಂಕರ್, ಅಶೋಕ್, ಜಯಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.