ADVERTISEMENT

ಡಿ.ಕೆ. ಶಿವಕುಮಾರ್ ನನ್ನ ಬಗ್ಗೆ ಚಿಂತಿಸುವುದು ಬೇಡ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 6:25 IST
Last Updated 23 ಜುಲೈ 2022, 6:25 IST
 ಬಿ ಎಸ್ ಯಡಿಯೂರಪ್ಪ
 ಬಿ ಎಸ್ ಯಡಿಯೂರಪ್ಪ   

ಶಿಕಾರಿಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಬಗ್ಗೆ ಚಿಂತಿಸುವುದು ಬೇಡ, ಅವರ ಪಕ್ಷದ ಬಗ್ಗೆ ಚಿಂತನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು.

‘ಬಿಜೆಪಿ ಯಡಿಯೂರಪ್ಪ ಅವರನ್ನು ಬಳಸಿ ಬಿಸಾಡಿದೆ’ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಎಲ್ಲ ರೀತಿ ಅವಕಾಶ ಮಾಡಿಕೊಟ್ಟಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಿ ನಡೆಸಲು ಅವಕಾಶ ನೀಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ರಾಜ್ಯದಲ್ಲಿ ಒಡಾಟ ಮಾಡಿ ಪಕ್ಷ ಬಲ ಪಡಿಸಲು ಗಮನ ನೀಡುತ್ತಿದ್ದೇನೆ. ನನಗೆ ಎಲ್ಲ ರೀತಿ ಸಹಕಾರವನ್ನು ಅಧಿಕಾರಿಗಳು, ಮುಖ್ಯಮಂತ್ರಿ ಹಾಗೂ ಮಂತ್ರಿಗಳು ನೀಡುತ್ತಿದ್ದಾರೆ’ ಎಂದು ಹೇಳಿದರು.

‘ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡಿದ್ದಾರೆ, ಯಡಿಯೂರಪ್ಪ ಹಿಂದೆ ಸರಿದಿದ್ದರೆ ಎನ್ನುವ ಪ್ರಶ್ನೆ ಇಲ್ಲ. ರಾಜ್ಯದಲ್ಲಿ ಹೆಚ್ಚು ಪ್ರವಾಸ ಮಾಡಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪವಾಗಿದೆ. ಅಧಿಕಾರ ಇಲ್ಲದಿದ್ದರೂ ಒಳ್ಳೆ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತರುವುದು ಹೇಗೆ ಎಂಬುದನ್ನು ತೋರಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.