ಶಿವಮೊಗ್ಗ:ಕೊಲ್ಕತ್ತಾದಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಶಿವಮೊಗ್ಗ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳು ಸೋಮವಾರ ಹೊರ ರೋಗಿಗಳ ವಿಭಾಗ ಬಂದ್ ಮಾಡುವ ಮೂಲಕ ಬೆಂಬಲ ಸೂಚಿಸಿದರು.
ಭಾರತೀಯ ವೈದ್ಯಕೀಯ ಸಂಘ ನೀಡಿದ್ದ ಕರೆಗೆ ಸ್ಪಂದಿಸಿದ ನಗರದ ಪ್ರತಿಷ್ಠಿತ ನಂಜಪ್ಪ ಆಸ್ಪತ್ರೆ, ನಾರಾಯಣ ಹೃದಯಾಲಯ, ಮೆಟ್ರೊ, ಸರ್ಜಿ, ಮ್ಯಾಕ್ಸ್, ಬಸವೇಶ್ವರ ಆಸ್ಪತ್ರೆಗಳ ವೈದ್ಯರು ಮುಷ್ಕರದಲ್ಲಿ ಭಾಗಿಯಾದರು. ‘ಆಸ್ಪತ್ರೆಗಳ ಮುಂದೆ ಒಪಿಡಿ ಸೇವೆ ಇಲ್ಲ’ ಎಂಬ ನಾಮ ಫಲಕ ಹಾಕಲಾಗಿತ್ತು. ತುರ್ತು ವಿಭಾಗಗಳು ಹಾಗೂ ಔಷಧ ಕೇಂದ್ರಗಳ ಸೇವೆ ಎಂದಿನಂತೆ ಮುಂದುವರಿದಿತ್ತು.
ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೇವೆ ದೊರಕದ ಪರಿಣಾಮ ದೂರದ ಊರುಗಳಿಂದ ಬಂದಿದ್ದ ರೋಗಿಗಳು ಪರದಾಡಿದರು.
ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ವೈದ್ಯರು ರಜೆ ರದ್ದು ಮಾಡಿ ಕೆಲಸಕ್ಕೆ ಹಾಜರಾಗಿದ್ದರು. ವೈದ್ಯರು ಮತ್ತು ಸಿಬ್ಬಂದಿ ಪೀರ್ಣ ಪ್ರಮಾಣದಲ್ಲಿ ಕೆಲಸ ಮಾಡಿದರು. ಮೆಗ್ಗಾನ್ ಆಸ್ಪತ್ರೆಯ ಎಲ್ಲಾ ವಿಭಾಗಗಳಲ್ಲಿಯೂ ಸರದಿ ಸಾಲು ಕಂಡು ಬಂತು. ಹೊರ ರೋಗಿಗಳ ವಿಭಾಗದಲ್ಲಿ ರೋಗಿಗಳ ಸಂಖ್ಯೆ ಅಧಿಕವಾಗಿತ್ತು.
ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ ತಡೆಯಲು ಕ್ರಮ ಕೈಗೊಳ್ಳಬೇಕು. ವೈದ್ಯರು ಭಯಮುಕ್ತ ವಾತಾವರಣದಲ್ಲಿ ಕೆಲಸ ಮಾಡಲು ಅಗತ್ಯ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿ ವೈದ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.