ಶಿವಮೊಗ್ಗ:ಪಠ್ಯೇತರ ಚಟುವಟಿಕೆಯಿಲ್ಲದ ಇಂದಿನ ಶಿಕ್ಷಣ ಕೇವಲ ಅಂಕಕ್ಕೆ ಸೀಮಿತವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಚಿತ್ರಕಲಾ ಶಿಕ್ಷಕ ಪಿ.ಎಸ್. ದೀಪು ಅವರ ಏಕವ್ಯಕ್ತಿ ಚಿತ್ರಕಲಾಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
‘ಇಂದು ಪಠ್ಯೇತರ ಚಟುವಟಿಕೆ ಕಡಿಮೆಯಾಗುತ್ತಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಕ್ರೀಡೆ, ಸಾಹಿತ್ಯ, ಸಂಗೀತ ಕರಕುಶಲ ಮತ್ತು ಚಿತ್ರಕಲೆಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ಧಿಗೆ ಇದು ಪೂರಕವಾಗಲಿದೆ.ಇಂದಿನ ಚಿತ್ರಕಲೆ ಆಧುನಿಕ ಸ್ವರೂಪ ಪಡೆದುಕೊಂಡಿದೆ. ಮೂಲ ಸ್ವರೂಪದ ಚಿತ್ರಕಲೆ ಮರೆಯಾಗುತ್ತಿದೆ. ಚಿತ್ರಕಲೆ ಉಳಿಯಬೇಕು ಮತ್ತು ಬೆಳೆಯಬೇಕು’ ಎಂದರು.
ಮೇಯರ್ ಸುನಿತಾ ಅಣ್ಣಪ್ಪ ಮಾತನಾಡಿ, ‘ಕಲೆ ಸಂಸ್ಕೃತಿಯ ಮತ್ತೊಂದು ರೂಪ. ಭಾರತೀಯ ಸಂಸ್ಕೃತಿಯಲ್ಲಿ ಪುರಾಣದಿಂದ ಹಿಡಿದು ಇಂದಿನವರೆಗೆ ಚಿತ್ರಕಲೆಗೆ ಪ್ರೋತ್ಸಾಹ ಸಿಗುತ್ತಿದೆ. ಪಾಲಿಕೆ ವತಿಯಿಂದಲೂ ಕೂಡ ಎಲ್ಲಾ ರೀತಿಯ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ. ಮೂರು ದಿನಗಳ ಕಾಲ ನಡೆಯುತ್ತಿದ್ದ ದಸರಾ ಸಂಭ್ರಮ ಈಗ 10 ದಿನಗಳಿಗೆ ವಿಸ್ತರಣೆಯಾಗಿದೆ. ನೂತನ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಗಮನಹರಿಸಲಾಗುತ್ತಿದೆ’ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಪ್ರೊ. ಆಶಾಲತಾ, ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ.ಬಿ.ಜಿ. ಅವಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.