
ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಅರಹತೊಳಲು ಕೈಮರದ ಹೃದಯ ಭಾಗದಲ್ಲಿ ವಾಹನ ದಟ್ಟಣೆ ನಿಯಂತ್ರಿಸಿ, ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಊರಿನ ಹಿರಿಯರೊಂದಿಗೆ ಚರ್ಚಿಸಿದ ಅವರು, ವಾಹನ ದಟ್ಟಣೆಯಿಂದ ಅಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಅಹವಾಲು ಆಲಿಸಿದರು. ಅದಕ್ಕೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಕೈಮರದಲ್ಲಿ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಅಕ್ರಮ ಕಟ್ಟಡ, ಫ್ಲೆಕ್ಸ್ಗಳನ್ನು ತೆರವುಗೊಳಿಸಲು ಸಂಬಂಧಿಸಿದವರಿಗೆ ನೋಟಿಸ್ ನೀಡುವಂತೆ ಪಿಡಿಒಗೆ ಸೂಚಿಸಿದರು. ವಾಹನ ಸಂಚಾರಕ್ಕೆ ಹಾಗೂ ಜನರ ಓಡಾಟಕ್ಕೆ ಅಡ್ಡಿಯಾಗಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದನ್ನು ತಪ್ಪಿಸುವಂತೆ ಅಂಗಡಿಯವರಿಗೆ ಸೂಚಿಸಿದರು.
ಕೈಮರದ ನಾಲ್ಕೂ ದಿಕ್ಕಿನಿಂದ ವಾಹನಗಳ ಸರಾಗವಾಗಿ ಓಡಾಟಕ್ಕೆ ಹಾಗೂ ರಸ್ತೆ ಕಾಣದಂತೆ ಇರುವ ತೊಡಕು ನಿವಾರಿಸುವಂತೆ ಸ್ಥಳೀಯರು ಡಿವೈಎಸ್ಪಿ ಅವರಿಗೆ ಮನವಿ ಸಲ್ಲಿಸಿದರು. ಅಪಘಾತಗಳನ್ನು ತಡೆಯಲು ಶುಕ್ರವಾರ ಅಗತ್ಯ ಕ್ರಮಕ್ಕೆ ಮುಂದಾಗಲಿದ್ದೇವೆ. ಅದಕ್ಕೆ ಪೂರಕವಾಗಿ ಪಂಚಾಯಿತಿಯಿಂದ ನಿಯಮಬದ್ಧವಾಗಿ ಕ್ರಮ ಕೈಗೊಳ್ಳುವಂತೆ ಪ್ರಕಾಶ್ ರಾಥೋಡ್ ಸಿಬ್ಬಂದಿಗೆ ಹೇಳಿದರು.
ಕೈಮರದಲ್ಲಿ ಅಪಘಾತ ಹೆಚ್ಚಳ ಹಾಗೂ ಅಲ್ಲಿನ ಅವ್ಯವಸ್ಥೆಯ ಬಗ್ಗೆ ‘ಪ್ರಜಾವಾಣಿ’ ಸೋಮವಾರ ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.