ಶಿವಮೊಗ್ಗ: ಜಗದ ಎಲ್ಲಾ ರೋಗ ರುಜಿನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್ ತಿಳಿಸಿದರು.
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಸಮಯ ಮತ್ತು ಅವಕಾಶ ಬದುಕಿನಲ್ಲಿ ಅಮೂಲ್ಯ. ಓದುವ ಸಮಯ, ಸಾಧಿಸುವ ಅವಕಾಶ ಸದಾ ಬದುಕಿನಲ್ಲಿ ಸಿಗುವುದಿಲ್ಲ. ಸಿಗುವ ಅವಕಾಶ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಜೀವನದಲ್ಲಿ ಸಾಧನೆ ಸಾಧ್ಯ ಎಂದಾದರೇ ಅದು ನಮ್ಮ ಓದಿನ ಹಪಹಪಿಯಿಂದ ಮಾತ್ರ. ಹಿಂದೆ ಯಾಗಗಳ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಲಾಗುತ್ತಿತ್ತು. ಇಂದು ವಿದ್ಯೆಯ ಮೂಲಕ ಎಲ್ಲರಿಗೂ ಒಳ್ಳೆಯದಾಗಲಿ ಎಂಬ ಯಾಗ ನಡೆಯುತ್ತಿದೆ’ ಎಂದರು.
‘ನಮ್ಮೂರಿನ ಹಳ್ಳಿಯ ಶಾಲೆಯಿಂದ ಪದವಿಗೆ ತಲುಪಲು ಸಾಧ್ಯವಾಗಿದ್ದು ಕೆಲವೇ ಕೆಲವರಿಗೆ ಮಾತ್ರ. ನಿಮ್ಮ ಆತ್ಮತೃಪ್ತಿಗಾಗಿ ಕೆಲಸ ಮಾಡಿ. ಅದಕ್ಕಾಗಿ ವಿವೇಕ ಚೂಡಾಮಣಿಯಂತಹ ಪುಸ್ತಕಗಳ ಅಧ್ಯಯನ ನಡೆಸಿ. ನಮ್ಮ ಚಂದನವನ ಸದಾಚಾರದ ಚಂದನವನವಾಗಬೇಕು. ಆಂತರಿಕ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ’ ಎಂದು ಸಲಹೆ ನೀಡಿದರು.
ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕರಾದ ಕುಮಾರ್ ಪಿ., ಕೋರ್ಸ್ ನಿರ್ದೇಶಕರಾದ ಡಾ.ಸರೀತ್ ಕುಮಾರ್, ಜೆ.ಎನ್.ಎನ್. ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರಪ್ರಸಾದ್, ಡಿವೈಎಸ್ಪಿ ಸುರೇಶ್, ಚಿರಾಗ್ ಇನ್ಫೊಟೆಕ್ನ ಗಿರೀಶ್ ಡಿ.ಪಿ, ಎಂಸಿಎ ವಿಭಾಗದ ನಿರ್ದೇಶಕ ಡಾ.ಪ್ರಭುದೇವ, ಎಂಬಿಎ ವಿಭಾಗದ ನಿರ್ದೇಶಕ ಡಾ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಪ್ರಶಾಂತ್ ಅಂಕಲಕೋಟಿ, ವಿಕ್ರಮ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.