ADVERTISEMENT

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹ

ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 5:36 IST
Last Updated 6 ಫೆಬ್ರುವರಿ 2026, 5:36 IST
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು
ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಗುರುವಾರ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು   

ಶಿವಮೊಗ್ಗ: ‘ಅಬಕಾರಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟರೂ ಯಾವುದೇ ಕ್ರಮ ಕೈಗೊಳ್ಳದ ಕೆಟ್ಟ ಮನಸ್ಸಿನ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರವನ್ನು ಸಮರ್ಥಿಸುತ್ತಿದೆ’ ಎಂದು ಶಾಸಕ ಚನ್ನಬಸಪ್ಪ ಆರೋಪಿಸಿದರು.

ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ, ಗುರುವಾರ ಶಿವಪ್ಪನಾಯಕ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ನರೇಗಾ ಯೋಜನೆ ಹೆಸರಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಲೂಟಿಯನ್ನು ತಡೆಯಲು ಕೇಂದ್ರವು ‘ವಿಬಿ ಜಿ ರಾಮ್‌ ಜಿ ಯೋಜನೆ’ ಜಾರಿಗೆ ತಂದಿದ್ದು, ರಾಜ್ಯದಲ್ಲಿ ಅದನ್ನು ಅನುಸರಿಸಲಾಗುತ್ತಿಲ್ಲ’ ಎಂದು ಟೀಕೆ ಮಾಡಿದರು.

ADVERTISEMENT

‘ಸ್ವಾತಂತ್ರ್ಯ ಸಿಕ್ಕ ಕೂಡಲೇ ಮಹಾತ್ಮ ಗಾಂಧೀಜಿ ಕಾಂಗ್ರೆಸನ್ನು ವಿಸರ್ಜಿಸಬೇಕು ಎಂದು ಹೇಳಿದ್ದರು. ಆದರೆ ಇಂದಿರಾ, ರಾಜೀವ್, ಸೋನಿಯಾ ಮತ್ತು ರಾಹುಲ್‌ ಅವರು ಗಾಂಧಿ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಶೇ 90ರಷ್ಟು ನಿರ್ಮೂಲನೆಗೊಂಡಿದೆ. ಮತದಾರ ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಮೋಹನ್‌ರೆಡ್ಡಿ, ಜ್ಞಾನೇಶ್ವರ್, ನಾಗರಾಜ್, ಜ್ಯೋತಿಪ್ರಕಾಶ್, ದೀನ್‌ದಯಾಳ್, ಹರಿಕೃಷ್ಣ, ರಶ್ಮಿ ಶ್ರೀನಿವಾಸ್, ಹರೀಶ್‌ನಾಯ್ಕ, ಶಾಂತಾ ಸುರೇಂದ್ರ, ಸುರೇಖಾ ಮರುಳೀಧರ್, ಚೈತ್ರಾನಾಯಕ್, ಎಸ್. ಚಂದ್ರಶೇಖರ್, ಸುಮಾ ಭೂಪಾಳಂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

- ಇದು ಮೂರು ‘ಸಿ’ ಸರ್ಕಾರ

ರಾಜ್ಯ ಸರ್ಕಾರವನ್ನು ‘ಮೂರು ‘ಸಿ’ (ಕಲೆಕ್ಷನ್ ಕರೆಪ್ಶನ್ ಕಮಿಷನ್) ಸರ್ಕಾರ ಎಂದು ಕರೆಯಬಹುದು. ಅಬಕಾರಿ ಪರವಾನಗಿ ಅಧಿಕಾರಿಗಳ ವರ್ಗಾವಣೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ರಾಜ್ಯದ ಜನ ಈ ಭ್ರಷ್ಟಾಚಾರವನ್ನು ಗಮನಿಸುತ್ತಿದ್ದು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಅಧಿಕಾರ ಬಂದಾಗಿನಿಂದ ಹಾಲಿನಿಂದ ಆಲ್ಕೋಹಾಲ್‌ವರೆಗೆ ಯಾವುದೇ ಪದಾರ್ಥವನ್ನು ಬಿಡದೆ ಮನಬಂದಂತೆ ಬೆಲೆ ಏರಿಕೆ ಮಾಡಲಾಗಿದೆ. ವಿದ್ಯುತ್ ಛಾಪಾ ಕಾಗದ ನೋಂದಣಿ ಶುಲ್ಕ ಯಾವುದನ್ನೂ ಬಿಟ್ಟಿಲ್ಲ. – ಡಾ.ಧನಂಜಯ ಸರ್ಜಿ ವಿಧಾನ ಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.