ಸಾಗರ: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ರದ್ದುಗೊಳಿಸಿದ್ದರಿಂದ ಒಂದು ದೇಶ, ಒಂದು ಧ್ವಜ ಎಂಬ ಕಲ್ಪನೆ ಸಾಕಾರಗೊಂಡಿದೆ ಎಂದು ಶಾಸಕ
ಎಚ್. ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ಗಣಪತಿ ಕೆರೆಯ ಪಕ್ಕದಲ್ಲಿ ನಿರ್ಮಿಸಿರುವ 159 ಅಡಿ ಎತ್ತರದ ಧ್ವಜಸ್ತಂಭವನ್ನು ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿ, ‘ಅನೇಕ ರಾಜ್ಯಗಳು ಸೇರಿರುವ ಒಕ್ಕೂಟ ವ್ಯವಸ್ಥೆ ನಮ್ಮ ವಿಶೇಷ. ಅನೇಕ ತೊಡಕುಗಳ ನಡುವೆಯೂ ದೇಶ ಅಭಿವೃದ್ಧಿ ಪಥದತ್ತ ನಡೆಯುತ್ತಿದೆ’ ಎಂದು ಹೇಳಿದರು.
ನಗರದ ಹೃದಯ ಭಾಗದಲ್ಲಿರುವ ಗಣಪತಿ ಕೆರೆ ಅಭಿವೃದ್ಧಿಗೆ ಆಡಳಿತ ಬದ್ಧವಾಗಿದೆ. ಕೆರೆಯ ಪುನಶ್ಚೇತನಕ್ಕೆ ಮುಂದಿನ ದಿನಗಳಲ್ಲಿ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಊರಿನವರ ಸಹಕಾರ ಅಗತ್ಯ ಎಂದು ಹೇಳಿದರು.
ನೂತನ ಧ್ವಜಸ್ತಂಭದಲ್ಲಿ ವರ್ಷದ 365 ದಿನವೂ ರಾಷ್ಟ್ರಧ್ವಜ ಹಾರಲಿದೆ. ಇಲ್ಲಿ ನಿರ್ಮಿಸಿರುವ ಉದ್ಯಾನ ಆಕರ್ಷಣೆಯ ಕೇಂದ್ರಬಿಂದು ಆಗಲಿದ್ದು, ಇದೊಂದು ಊರಿನ ಪ್ರಮುಖ ಸ್ಥಳವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ತುಕಾರಾಂ, ಉಪವಿಭಾಗಾಧಿಕಾರಿ ಪ್ರಸನ್ನ ವಿ. ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಸದಸ್ಯರಾದ ಟಿ.ಡಿ. ಮೇಘರಾಜ್, ಬಿ.ಎಚ್. ಲಿಂಗರಾಜ್, ಕೆ.ಆರ್. ಗಣೇಶ್ ಪ್ರಸಾದ್, ಅರವಿಂದ ರಾಯ್ಕರ್, ಮೈತ್ರಿ ಪಾಟೀಲ್, ಸೈಯದ್ ಜಾಕೀರ್, ಮಧು ಮಾಲತಿ, ಆರ್. ಶ್ರೀನಿವಾಸ್, ಕುಸುಮಾ ಸುಬ್ಬಣ್ಣ, ಭಾವನಾ ಸಂತೋಷ್, ಸಂತೋಷ್ ಆರ್. ಶೇಟ್ ಅವರೂ ಈ ಸಂದರ್ಭದಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.