ಸಾಗರ: ತಾಲ್ಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ವರದಾ ನದಿಯ ನೀರು ಉಕ್ಕುವುದರಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಇದನ್ನು ತಡೆಯಲು ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆರೆಪೀಡಿತ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಹದಿಂದ 3,000 ಎಕರೆ ಪ್ರದೇಶದ ಭತ್ತದ ಗದ್ದೆ ನೀರಿನಲ್ಲಿ ಮುಳುಗುವುದರಿಂದ ಉಂಟಾಗುವ ಬೆಳೆ ನಷ್ಟವನ್ನು ತಪ್ಪಿಸುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ ಎಂದರು.
ನಾನು ಈ ಹಿಂದೆ ಸಚಿವನಾಗಿದ್ದಾಗ ಈ ಭಾಗದಲ್ಲಿ ಹರಿಯುವ ನೀರನ್ನು ಬೇರೆಡೆಗೆ ಕೊಂಡೊಯ್ಯುವ ಸಂಬಂಧ ಯೋಜನೆ ರೂಪಿಸಲಾಗಿತ್ತು. ಅದನ್ನು ಈಗ ಕಾರ್ಯಗತಗೊಳಿಸಬೇಕಿದೆ ಎಂದು ಅವರು ಹೇಳಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಮಂಡಗಳಲೆ ಹುಚ್ಚಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.