ಸಾಗರ: ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ಚಿಕ್ಕಮತ್ತೂರು ಗ್ರಾಮದ ರೈತರು ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಒತ್ತಾಯಿಸಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಶನಿವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸದೆ ಅರ್ಜಿಗಳನ್ನು ತಿರಸ್ಕರಿಸಿರುವುದು ಸರಿಯಾದ ಕ್ರಮವಲ್ಲ. ಹೀಗೆ ತಿರಸ್ಕರಿಸಲಾದ ಅರ್ಜಿಗಳ ಪುನರ್ ಪರಿಶೀಲನೆ ಮಾಡಬೇಕು.ಅರ್ಜಿಗಳ ಪುನರ್ ಪರಿಶೀಲನೆ ಮಾಡುವಾಗ ಸರ್ಕಾರ ಸೂಚಿಸಿರುವ 13 ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಈ ಬಗ್ಗೆ ಗ್ರಾಮ ಅರಣ್ಯ ಹಕ್ಕು ಸಮಿತಿ ಸದಸ್ಯರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಬೇಕು ಎಂದು ಕಾಗೋಡು ತಿಮ್ಮಪ್ಪಒತ್ತಾಯಿಸಿದರು.
ಅರಣ್ಯಭೂಮಿ ಹಕ್ಕು ಕಾಯ್ದೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ದೊರಕಲು ಅಗತ್ಯವಿರುವ ಕ್ರಮ ಕೈಗೊಳ್ಳಲು ತಾಲ್ಲೂಕು ಆಡಳಿತ ಮುಂದಾಗಬೇಕು. ಈ ಮೂಲಕ ಜೀವನೋಪಾಯಕ್ಕಾಗಿ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಕೃಷಿಕರಿಗೆ ಭೂಮಿಯ ಹಕ್ಕು ದೊರಕಿಸಿಕೊಡಲು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ಬಿ.ಆರ್. ಜಯಂತ್, ಮಲ್ಲಿಕಾರ್ಜುನ ಹಕ್ರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.