ADVERTISEMENT

ತೀರ್ಥಹಳ್ಳಿಗೆ ಬಂದ ರೋಹಿತ್ ಚಕ್ರತೀರ್ಥಗೆ ಪ್ರತಿಭಟನೆಯ ಬಿಸಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 14:41 IST
Last Updated 28 ಡಿಸೆಂಬರ್ 2022, 14:41 IST
'ರಾಷ್ಟ್ರಕವಿ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ' ವಿಷಯವಾಗಿ ಉಪನ್ಯಾಸ ನೀಡಲು ಬುಧವಾರ ಸಂಜೆ ತೀರ್ಥಹಳ್ಳಿಗೆ ಬಂದ ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿತು.
'ರಾಷ್ಟ್ರಕವಿ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ' ವಿಷಯವಾಗಿ ಉಪನ್ಯಾಸ ನೀಡಲು ಬುಧವಾರ ಸಂಜೆ ತೀರ್ಥಹಳ್ಳಿಗೆ ಬಂದ ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿತು.   

ಶಿವಮೊಗ್ಗ: 'ರಾಷ್ಟ್ರಕವಿ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ' ವಿಷಯವಾಗಿ ಉಪನ್ಯಾಸ ನೀಡಲು ಬುಧವಾರ ಸಂಜೆ ತೀರ್ಥಹಳ್ಳಿಗೆ ಬಂದ ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿತು.

ಮಾಜಿ ಸಚಿವ ಕಿಮ್ಮನೆ ರತ್ನಾಕರ, ನೆಂಪೆ ದೇವರಾಜ ನೇತೃತ್ವದಲ್ಲಿ ನೂರಾರು ಮಂದಿ ಸಮಾನ ಮನಸ್ಕರು ಸೇರಿ ಕಪ್ಪು ಪಟ್ಟಿ ಧರಿಸಿ ಗೋ ಬ್ಯಾಕ್ ಚಕ್ರತೀರ್ಥ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ತೀರ್ಥಹಳ್ಳಿಯ ಸೊಪ್ಪು ಗುಡ್ಡೆಯ ಗೋಪಾಲಗೌಡ ರಂಗ ಮಂದಿರದಲ್ಲಿ ಕಡಗೋಲು ವಿಚಾರ ಮಂಥನ ವೇದಿಕೆಯಿಂದ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಎಂಬ ವಿಷಯ ಕುರಿತಾಗಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ADVERTISEMENT

ಕಾರ್ಯಕ್ರಮದ ಸ್ಥಳಕ್ಕೆ ನುಗ್ಗಲು ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಕೊಪ್ಪ ವೃತ್ತದಲ್ಲಿ ತಡೆದು ವಶಕ್ಕೆ ಪಡೆದು ಕರೆದೊಯ್ದರು.

ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಪಾಲ್ಗೊಂಡಿದ್ದಾರೆ. ಹೀಗಾಗಿ ಗೋಪಾಲಗೌಡ ರಂಗಮಂದಿರದ ಸುತ್ತಲೂ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಿ ಒಳಗೆ ಬಿಟ್ಟಿದ್ದಾರೆ.

ರೋಹಿತ್ ಚಕ್ರತೀರ್ಥ ಪಾಲ್ಗೊಳ್ಳುತ್ತಿರುವುದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಅತಿಥಿಯಾಗಿ ಪಾಲ್ಗೊಳ್ಳಬೇಕಿದ್ದ ಮಾಜಿ ಶಾಸಕ ಕಡಿದಾಳು ದಿವಾಕರ್ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

'ಕುವೆಂಪು ಅವರು ಬರೆದಿರುವ ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಕವಿತೆಯನ್ನು ತಿರುಚಿ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ. ಅಂತಹ ವ್ಯಕ್ತಿಯನ್ನು ತೀರ್ಥಹಳ್ಳಿಗೆ ಕರೆಸಿ ಕುವೆಂಪು ಅವರ ಸಾಹಿತ್ಯದ ಬಗ್ಗೆ ಮಾತನಾಡಲು ವೇದಿಕೆ ಕಲ್ಪಿಸಲಾಗುತ್ತಿದೆ.

ಬಿಜೆಪಿಯವರು ಚುನಾವಣೆಯಲ್ಲಿ ಮತಕ್ಕಾಗಿ ಆತನನ್ನು ಕರೆಸುತ್ತಿದ್ದಾರೆ. ಆದರೆ ಕುವೆಂಪು ಅವರನ್ನು ಅವಮಾನ ಮಾಡಿದವನನ್ನು ಮತಕ್ಕಾಗಿ ಕರೆಸಬಾರದು. ರಾಜಕೀಯ ಅಜೆಂಡಾ ಏನೇ ಇದ್ದರೂ ಚುನಾವಣೆಯಲ್ಲಿ ತೋರಿಸಿ. ಆದರೆ ಕುವೆಂಪು ಅವರ ವಿಷಯವನ್ನು ಇಟ್ಟುಕೊಂಡು ರಾಜಕೀಯ ಮಾಡಬೇಡಿ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಚಕ್ರತೀರ್ಥರನ್ನು ಆಯ್ಕೆ ಮಾಡಿದ್ದೆ ಸರ್ಕಾರ ಮಾಡಿರುವ ತಪ್ಪು. ತನ್ನ ತಪ್ಪುಗಳನ್ನು ಬಿಜೆಪಿ ಸರ್ಕಾರ ಇಲ್ಲಿಯವರೆಗೂ ಒಪ್ಪಿಕೊಂಡಿಲ್ಲ. ಕುವೆಂಪು ಅವರನ್ನು ಅಪಮಾನ ಮಾಡಿರುವ ಚಕ್ರತೀರ್ಥ ಈ ತಾಲ್ಲೂಕಿಗೆ ಕಾಲಿಡಬಾರದು' ಎಂದು ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ ಅಧ್ಯಕ್ಷರೂ ಆದ ನೆಂಪೆ ದೇವರಾಜ್ ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.