
ಗೋಪಾಲಕೃಷ್ಣ ಬೇಳೂರು
ಸಾಗರ: ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ವಿಷಯದಲ್ಲಿ ಇಲ್ಲಿನ ಬಿಜೆಪಿ ಮುಖಂಡರು ಇಬ್ಬಗೆಯ ಧೋರಣೆ ತೋರುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರಕ್ಕೆ ಮಾರಕ ಎಂದು ವಿರೋಧಿಸುತ್ತಿರುವ ಬಿಜೆಪಿ ಪ್ರಮುಖರು, ಅರಣ್ಯ ಉಳಿಸುವ ವಿಷಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಈ ಮೂಲಕ ರಾಜಕೀಯವಾಗಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ತಾಲ್ಲೂಕಿನ ಬೇಸೂರು ಗ್ರಾಮದ ಎಸ್ಸಿ ಕಾಲೊನಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು ಭದ್ರಪಡಿಸಿಕೊಳ್ಳಲು ಟ್ರಂಚ್ ಹೊಡೆಯಲು ಮುಂದಾದಾಗ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದಾರೆ. ದೀರ್ಘಕಾಲದಿಂದ ಅರಣ್ಯಭೂಮಿ ಸಾಗುವಳಿ ಮಾಡುತ್ತಿರುವವರಿಗೆ, ವಾಸವಾಗಿರುವವರಿಗೆ ಹಕ್ಕುಪತ್ರ ನೀಡಲು ನನ್ನ ವಿರೋಧವಿಲ್ಲ. ಆದರೆ, ಹೊಸದಾಗಿ ಒತ್ತುವರಿ ಮಾಡುವವರ ಬೆಂಬಲಕ್ಕೆ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಅರ್ಹ ಫಲಾನುಭವಿಗಳಿಗೆ ಬಗರ್ ಹುಕುಂ ಕಾಯ್ದೆಯಡಿ ಹಕ್ಕುಪತ್ರ ಕೊಡುವ ಕೆಲಸದ ಜೊತೆಗೆ ಅರಣ್ಯ ಉಳಿಸಿಕೊಳ್ಳುವ ಕಾರ್ಯವೂ ನಡೆಯಬೇಕಿದೆ. ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಟ್ರಂಚ್ ಹೊಡೆಯಲು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.