ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೇ 18ರಿಂದ 20ರವರೆಗೆ ಶಿವಮೊಗ್ಗದಲ್ಲಿ ನಡೆಯಲಿವೆ. 15 ಸಾವಿರ ನೌಕರರು ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 18ರಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕ್ರೀಡೆ ವೈಯಕ್ತಿಕ ವಿಭಾಗದಲ್ಲಿ 97, ಗುಂಪು 16, ಸಾಂಸ್ಕೃತಿಕ ಸ್ಪರ್ಧೆ ವೈಯಕ್ತಿಕ ವಿಭಾಗದಲ್ಲಿ 15 ಹಾಗೂ ಗುಂಪು ವಿಭಾಗದಲ್ಲಿ 16 ಸ್ಪರ್ಧೆಗಳು ನಡೆಯಲಿವೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಸಾಂದರ್ಭಿಕ ರಜೆ ಸೌಲಭ್ಯ ಸರ್ಕಾರ ಮಂಜೂರು ಮಾಡಿದೆ. ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೂ ಊಟೋಪಚಾರ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.
ಉದ್ಘಾಟನೆಯ ದಿನ ಸಂಜೆ 7 ಗಂಟೆಗೆ ಗಾಯಕ ರಾಜೇಶ್ ಕೃಷ್ಣನ್ ಅವರಿಂದ ಗಾನಸುಧೆ-ಸಂಗೀತ ಸಂಜೆ ಹಾಗೂ ಮೇ 19ರಂದು ಜನಪಣ ದಿಬ್ಬಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.