
ಭದ್ರಾವತಿ: ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು’ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಭರವಸೆ ನೀಡಿದರು.
ಭಾನುವಾರ ತಾಲ್ಲೂಕಿನ ಬಿ.ಆರ್.ಪಿ ಕರಾವಳಿ ಆಸ್ಪತ್ರೆ ಸಮೀಪದ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಪಂಚ ಗ್ಯಾರಂಟಿ ಪ್ರಾಧಿಕಾರದ ಸಮಿತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಯಾವುದೇ ಬಾಕಿ ಉಳಿಸಿಕೊಳ್ಳದೆ ಸಮರ್ಪಕವಾಗಿ ಅವರ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಗುರಿ ಸಾಧಿಸಲಾಗುವುದು. ಉಳಿದಂತೆ ಶಕ್ತಿ ಯೋಜನೆಯನ್ನು ಬಹುತೇಕ ಮಹಿಳೆಯರು ಸದ್ಬಳಕೆ ಮಾಡಿಕೊಂಡಿದ್ದು, ಈ ಯೋಜನೆಯಲ್ಲೂ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಅಲ್ಲದೆ ಯೋಜನೆಗೆ ವ್ಯಯವಾಗಿರುವ ಸುಮಾರು ₹300 ಕೋಟಿ ಅನುದಾನ ಸಹ ಸರ್ಕಾರದಿಂದ ಬಿಡುಗಡೆ ಮಾಡಿಸಲಾಗಿದೆ’ ಎಂದು ಹೇಳಿದರು.
‘ಅಂದಾಜು ₹ 57 ಕೋಟಿ ವೆಚ್ಚದಲ್ಲಿ ಈ ವ್ಯಾಪ್ತಿಯಲ್ಲಿ ಬರುವ ಸಿಂಗನಮನೆ, ನೆಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಹುಣಸೇಕಟ್ಟೆ ಸೇರಿ ಇನ್ನಿತರ ಗ್ರಾಮಗಳಲ್ಲಿ ಕೆರೆಗಳನ್ನು ನಿರ್ಮಾಣಮಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ’ ಎಂದರು.
ಪ್ರಮುಖರಾದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್. ಮಣೆಶೇಖರ್, ಉದ್ಯಮಿ ಬಿ.ಕೆ. ಜಗನ್ನಾಥ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್, ಸಿಂಗನಮನೆ ಗ್ರಾಮ ಪಂಚಾಯಿತಿ ಸೇರಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು, ಪ್ರಿಯಾಂಕಾ ಗಣೇಶ್, ಮಾಲಾಗೌಡ ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.