ಶಿವಮೊಗ್ಗ: ರಾಜ್ಯ ಸರ್ಕಾರ ಕೂಡಲೇ ಶಿವಮೊಗ್ಗ ಸೇರಿದಂತೆ ರಾಜ್ಯದ ಏಳು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆಯಲ್ಲಿನ ದುರಾಡಳಿತ ಕಂಡು ಅಲ್ಲಿನ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗೆ ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಉಪಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ. ಚುನಾಯಿತ ಪ್ರತಿನಿಧಿಗಳು ಇಲ್ಲದೆ ಶಿವಮೊಗ್ಗ ನಗರ ಕಸದ ತೊಟ್ಟಿಯಾಗಿದೆ ಎಂದು ಹೇಳಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದರು.
ಮಹಾನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಈಗಾಗಲೇ ರಾಜ್ಯ ಚುನಾವಣಾ ಆಯೋಗ ಹೇಳಿದೆ. ನ್ಯಾಯಾಲಯ ಕೂಡ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದೆ. ಆದರೂ ಕೂಡ ರಾಜ್ಯಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸುವುದು ಇಷ್ಟವಿಲ್ಲ ಎಂದು ತೋರುತ್ತದೆ. ಕೂಡಲೇ ಚುನಾವಣೆ ನಡೆಸಲು ಮುಂದಾಗಬೇಕು. ರಾಜ್ಯ ಸರ್ಕಾರ ಮೀಸಲಾತಿ ಘೋಷಿಸಿದರೆ ಸರಿ. ಇಲ್ಲದಿದ್ದರೆ ಕೋರ್ಟ್ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗುತ್ತಿಗೆ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ.4 ರಷ್ಟು ಮೀಸಲಾತಿ ರಾಜ್ಯ ಸರ್ಕಾರ ಪ್ರಕಟಿಸಿರುವುದು ಸಂವಿಧಾನ ವಿರೋಧಿಯಾಗಿದೆ. ಇದು ಅಂಬೇಡ್ಕರ್ ಹಾಗೂ ಸಂವಿಧಾನಕ್ಕೂ ಮಾಡಿರುವ ದ್ರೋಹ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ. ವಿಶ್ವಾಸ್, ಮೋಹನ್ ಜಾಧವ್, ಚನ್ನಬಸಪ್ಪ, ರಾಜು, ಶಿವು, ಕುಬೇರಪ್ಪ, ದೊರೆ, ಪ್ರಶಾಂತ್, ಬೇಳೂರು ಗೋವಿಂದಪ್ಪ, ರವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.