
ಸಾಗರ: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ನೀಡುತ್ತಿರುವ ಅನುದಾನದ ಪ್ರಮಾಣ ಹೆಚ್ಚಬೇಕಿದೆ. ಈ ಸಂಬಂಧ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
15ನೇ ಹಣಕಾಸು ಯೋಜನೆ ಹಾಗೂ ವಿಧಾನ ಪರಿಷತ್ ಸದಸ್ಯರ ಅನುದಾನದಡಿ ತಾಲ್ಲೂಕಿನ ಯಡಜಿಗಳಮನೆಯಲ್ಲಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯ ಸಂಪನ್ಮೂಲಗಳಿಂದಲೇ ಗ್ರಾಮ ಪಂಚಾಯಿತಿ ಆಡಳಿತ ನಿರ್ವಹಣೆ ಕಷ್ಟಸಾಧ್ಯ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ನೇರವಾಗಿ ಜನರ ಸಂಪರ್ಕಕ್ಕೆ ಸಿಗುವುದರಿಂದ ಎಲ್ಲದಕ್ಕೂ ಉತ್ತರ ಕೊಡುವ ಜವಾಬ್ದಾರಿ ಅವರ ಮೇಲಿರುತ್ತದೆ. ಪಂಚಾಯಿತಿ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವ ದೃಷ್ಟಿಯಿಂದಲೂ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ಪಂಚಾಯಿತಿ ವತಿಯಿಂದ ನಡೆಸುವ ಗ್ರಾಮ ಸಭೆಗಳನ್ನು ಕಾಟಾಚಾರಕ್ಕೆ ನಡೆಸುವ ಪ್ರವೃತ್ತಿ ಸರಿಯಲ್ಲ. ಈ ಸಭೆಗಳಿಗೆ ಇರುವ ಮಹತ್ವವನ್ನು ಗ್ರಾಮಸ್ಥರಿಗೆ ತಿಳಿಸಿ ಹೇಳಬೇಕಿದೆ. ಅದೇ ರೀತಿ ಗ್ರಾಮ ಸಭೆಗೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಹೊಣೆಗಾರಿಕೆ ಪಂಚಾಯಿತಿಗಳ ಮೇಲಿದೆ. ಇಂತಹ ಜವಾಬ್ದಾರಿ ಹೊತ್ತಿರುವ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ನೀಡಲೇಬೇಕಿದೆ. ಆಗ ಮಾತ್ರ ಪಂಚಾಯಿತಿ ಪ್ರತಿನಿಧಿಗಳು ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ, ಪ್ರಮುಖರಾದ ರಾಘವೇಂದ್ರ, ಮಾನಸ, ಜಯಂತಿ, ರವಿಕುಮಾರ್, ಸಚಿನ್, ಮಹಾದೇವಿ, ಎಂ.ಜಿ.ಕೃಷ್ಣಮೂರ್ತಿ, ಗಿರೀಶ್ ಹಕ್ರೆ, ಜಗದೀಶ್, ಪ್ರಶಾಂತಿ, ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.