ಆನಂದಪುರ: ಕಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಲ್ಲದ ಕಾರಣ ಕ್ಷೇತ್ರದಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಬೇಸತ್ತು ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ಸದಸ್ಯ ಖಲೀಮುಲ್ಲಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
‘ಪಂಚಾಯಿತಿಯಲ್ಲಿ ಪಿಡಿಒ ಇಲ್ಲದೇ ಇರುವುದರಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ.ಪಂಚಾಯಿತಿ ಸದಸ್ಯನಾಗಿ ಜನರ ಸಣ್ಣಪುಟ್ಟ ಕೆಲಸಕ್ಕೂ ಸ್ಪಂದಿಸಲು ಆಗುತ್ತಿಲ್ಲ. ನಾಲ್ಕೈದು ತಿಂಗಳಿನಲ್ಲಿ ಐದು ಜನ ಪಿಡಿಒಗಳು ವರ್ಗಾವಣೆಯಾಗಿದ್ದಾರೆ. ಯಾವ ಪಿಡಿಒಗಳೂ ಇಲ್ಲಿ ನೆಲೆ ನಿಲ್ಲುತ್ತಿಲ್ಲ. ಅಕ್ಕಪಕ್ಕದ ಗ್ರಾಮ ಪಂಚಾಯಿತಿಪಿಡಿಒಗಳನ್ನು ಇಲ್ಲಿಹಂಗಾಮಿಯಾಗಿ ನೇಮಕ ಮಾಡುತ್ತಿದ್ದು, ಅವರು ವಾರಕ್ಕೆ ಒಂದೆರಡು ದಿನ ಮಾತ್ರ ಬರುತ್ತಾರೆ. ಉಳಿದ ಅವಧಿಯಲ್ಲಿ ಅಭಿವೃದ್ದಿ ಅಧಿಕಾರಿಗಳು ಇರುವುದಿಲ್ಲ. ಇದರಿಂದ ಯಾವುದೇ ಕೆಲಸವಾಗುತ್ತಿಲ್ಲ. ಬೀದಿದೀಪ, ನೀರಿನ ಸಮಸ್ಯೆ ಬಗ್ಗೆ ಹೇಳಿದರೆ ಪಿಡಿಒ ಸ್ಪಂದಿಸುತ್ತಿಲ್ಲ. ಈ ಬಗ್ಗೆ ದೂರು ನೀಡೋಣ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗೆ ಕರೆಮಾಡಿದರೆ ಸ್ವೀಕರಿಸುತ್ತಿಲ್ಲ’ ಎಂದು ಖಲೀಮುಲ್ಲಾದೂರಿದರು.
‘ಶಾಸಕ ಹಾಲಪ್ಪ ಅವರು ನಮ್ಮ ಪಂಚಾಯಿತಿಯನ್ನು ಕಡೆಗಣಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ಕಿಟ್ ವಿತರಣೆ ಮಾಡಲು ಶಾಸಕರು ಬಂದಿದ್ದು ಬಿಟ್ಟರೆ ಮತ್ತೆ ಪಂಚಾಯಿತಿ ಸಮಸ್ಯೆ ಬಗ್ಗೆ ಕಿವಿಗೊಡುತ್ತಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಅವರಿಗೆ ಕರೆ ಮಾಡಿದರೆ ಅವರು ಕರೆ ಸ್ವೀಕರಿಸುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡಿದ್ದೇನೆ’ ಎಂದು ತಿಳಿಸಿದರು.
ರಾಜೀನಾಮೆ ಸ್ವೀಕರಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಎಸ್.ಜೆ., ‘ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿ ಇಲ್ಲದೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಕೆಲವು ತಿಂಗಳಿನಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಸಮಸ್ಯೆಗೆ ಹಿರಿಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೆಲಸ ಆಗುತ್ತಿಲ್ಲ ಎಂದು ಹಲವು ಸದಸ್ಯರು ಬೇಸತ್ತು ಹೋಗಿದ್ದಾರೆ’ ಎಂದು ತಿಳಿಸಿದರು.
ಪಂಚಾಯಿತಿ ಉಪಾಧ್ಯಕ್ಷ ಅಬ್ದುಲ್ ಘನಿ, ಲತಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.