
ಸೊರಬ: ‘ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಹಿಂದುಳಿದ ವರ್ಗ ಹಾಗೂ ಬಡ ಜನರಿಗೆ ಸಾಕಷ್ಟು ಅನುಕೂಲವಾಗಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಜನರು ಸದೃಢರಾಗುತ್ತಿದ್ದಾರೆ’ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಜಯಶೀಲ ಗೌಡ ಅಂಕರವಳ್ಳಿ ಹೇಳಿದರು.
ತಾಲ್ಲೂಕಿನ ಚಂದ್ರಗುತ್ತಿ ಅಂಬೇಡ್ಕರ್ ಭವನದಲ್ಲಿ ಸೋಮವಾರ ಗ್ರಾಮ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ ಅಡಿಯಲ್ಲಿ ಹಮ್ಮಿಕೊಂಡಿದ್ದ ಕೌಶಲದೊಂದಿಗೆ ಉದ್ಯೋಗ ಆಪ್ತ ಸಮಾಲೋಚನೆ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳಿಗೆ ಕೋಟಿಗಟ್ಟಲೆ ಹಣ ನೀಡುತ್ತಿದೆ. ರಾಜ್ಯದ ಜನ ಈ ಎಲ್ಲ ಯೋಜನಗಳನ್ನು ಪಡೆದು ಫಲನುಭವಿಗಳಾಗಿದ್ದಾರೆ’ ಎಂದು ಹೇಳಿದರು.
‘ಚುನಾವಣಾ ಪೂರ್ವದಲ್ಲಿ ಪಕ್ಷ ಆಶ್ವಾಸನೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಈ ಯೋಜನೆಗಳು ಸಾಕಷ್ಟು ಬಡ ಜನರ ಅವಲಂಬಿತ ಜೀವನಕ್ಕೆ ಅನುಕೂಲವಾಗಿದೆ. ಸಚಿವ ಮಧು ಬಂಗಾರಪ್ಪ ಅವರು ಜನಪರವಾಗಿ ಕಾರ್ಯ ವೈಖರಿಗಳನ್ನು ನಡೆಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಇ.ಒ ಶಶಿಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್, ಪ್ರಭಾಕರ್, ಮಂಜುನಾಥ್, ಮುಖ್ತಿಯಾರ್ ಭಾಷಾ, ಪ್ರವೀಣ್ ಕುಮಾರ್, ಸಂತೋಷ್, ಪಾಂಡು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್.ಜಿ. ನಾಗರಾಜ್, ಪಿಡಿಒ ನಾರಾಯಣಮೂರ್ತಿ, ರತ್ನಾಕರ ಎಂ.ಪಿ, ಲಕ್ಷ್ಮೀ ಚಂದ್ರಪ್ಪ, ಶಿಲ್ಪಾ, ಲಕ್ಷ್ಮೀ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.