
ಶಿವಮೊಗ್ಗ: ‘ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಗಳ ಮೂಲಕ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಜಿಲ್ಲೆಯ ಜನರಿಗೆ ₹ 3,024 ಕೋಟಿ ಹಣ ತಲುಪಿಸುವ ಮೂಲಕ ರಾಜ್ಯ ಸರ್ಕಾರ ಪಾರದರ್ಶಕ ಆಡಳಿತದ ಹೊಸ ಅಧ್ಯಾಯ ಬರೆದಿದೆ. ಫಲಾನುಭವಿಗಳಿಗೆ ಆರ್ಥಿಕ ಶಕ್ತಿ ತುಂಬಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹರ್ಷ ವ್ಯಕ್ತಪಡಿಸಿದರು.
ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಸರ್ವರಿಗೂ ಸಮಪಾಲು - ಸರ್ವರಿಗೂ ಸಮಬಾಳು’ ತತ್ವವೇ ನಮ್ಮ ಆಡಳಿತದ ಮೂಲಮಂತ್ರ ಎಂದು ಹೇಳಿದರು.
‘ರಾಜ್ಯದ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಪ್ರತಿದಿನ ಶಾಲೆಯಲ್ಲಿ ಸಂವಿಧಾನದ ಪೀಠಿಕೆ ಓದುತ್ತಿದ್ದಾರೆ. ಎಳೆಯ ವಯಸ್ಸಿನಲ್ಲೇ ಮಕ್ಕಳಲ್ಲಿ ಸಂವಿಧಾನದ ಮೌಲ್ಯಗಳನ್ನು ಬೆಳಸುವುದು ಸರ್ಕಾರದ ಉದ್ದೇಶ. ಇದು ಅವಶ್ಯಕತೆಯೂ ಹೌದು’ ಎಂದರು.
‘ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಹಾದಿಯಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ, ಹೈಟೆಕ್ ಶವಾಗಾರ, ಎಂ.ಸಿ.ಎ ಬ್ಲಾಕ್, ಕೇಂದ್ರ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಪರಿಶಿಷ್ಟ ಜಾತಿ/ ಪಂಗಡಗಳ ವಿದ್ಯಾರ್ಥಿನಿಲಯ ಕಟ್ಟಡ, ತುರ್ತು ನಿಗಾಘಟಕ ಕಟ್ಟಡದ ಕಾಮಗಾರಿಗೆ ಅನುಮೋದನೆ ದೊರೆತಿದೆ. ಹೊರ ರೋಗಿ ವಿಭಾಗ ಮತ್ತು ಡಾರ್ಮೆಟ್ರಿ ಬ್ಲಾಕ್, ಟ್ರಾಮಾ ಸೆಂಟರ್ ನಿರ್ಮಾಣ ಕಾಮಗಾರಿ ಪ್ರಸ್ತಾವ ಸರ್ಕಾರದ ಹಂತದಲ್ಲಿದ್ದು, ಶೀಘ್ರವೇ ಅನುಮೋದನೆ ದೊರೆಯಲಿದೆ’ ಎಂದರು.
‘ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣಕ್ಕೆ ₹ 45 ಕೋಟಿ ಬಿಡುಗಡೆ ಮಾಡಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ₹ 6 ಕೋಟಿ ವೆಚ್ಚದಲ್ಲಿ ನೈಟ್ ಲ್ಯಾಂಡಿಂಗ್ ಉಪಕರಣ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 225 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿದ್ದು, ಟೆಂಡರ್ ಕರೆಯಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ಗಳ ಅಭಿವೃದ್ಧಿಗೆ ‘ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಹಂತ-2’ರ ಅಡಿ ₹127.50 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಐದು ಪಶು ಆಸ್ಪತ್ರೆಗಳ ನಿರ್ಮಾಣಕ್ಕೆ ಆನುಮೋದನೆ ನೀಡಲಾಗಿದೆ’ ಎಂದು ವಿವರಿಸಿದರು.
‘ಜಿಲ್ಲೆಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಎರಡು ಹಾಸ್ಟೆಲ್ಗಳನ್ನು ಆರಂಭಿಸಲಾಗಿದೆ. ಯುವಜನತೆಯ ದಾರಿ ತಪ್ಪಿಸುವ ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳುತ್ತಿದ್ದು ಶಾಂತಿಯುತ ಶಿವಮೊಗ್ಗ ನಮ್ಮ ಗುರಿ’ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಚೇತನ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ಬಿ.ನಿಖಿಲ್, ಸಿಇಒ ಎನ್.ಹೇಮಂತ್ ಪಾಲ್ಗೊಂಡಿದ್ದರು.
ಶರಾವತಿ ಮುಳುಗಡೆ ಸಂತ್ರಸ್ತರು ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸೂಚನೆಯಂತೆ ಸಮೀಕ್ಷೆ ಕಾರ್ಯ ಮುಗಿದಿದೆ. ನ್ಯಾಯಾಲಯಕ್ಕೆ ವರದಿ ಸಲ್ಲಿಸಿ ಸಂತ್ರಸ್ತರಿಗೆ ಶಾಶ್ವತ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ
-ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
ಗುಡವಿ ಪಕ್ಷಿಧಾಮ ಅಭಿವೃದ್ಧಿಗೆ ಪಿಪಿಪಿ ಮಾದರಿ ‘ಒಂದು ಜಿಲ್ಲೆ ಒಂದು ತಾಣ’ ಯೋಜನೆಗೆ ಸೊರಬ ತಾಲ್ಲೂಕಿನ ಗುಡವಿ ಪಕ್ಷಿಧಾಮವನ್ನು ಸರ್ಕಾರ ಗುರುತಿಸಿದೆ. ಸಾರ್ವಜನಿಕ-ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಚಂದ್ರಗುತ್ತಿಯ ರೇಣುಕಾಂಬ ದೇವಿ ಪ್ರಾಧಿಕಾರ ರಚನೆಗೆ ಸರ್ಕಾರ ಅನುಮೋದನೆ ನೀಡಿದ್ದು ಅರಣ್ಯ ಇಲಾಖೆಯಿಂದ ಪಡೆದ 10 ಎಕರೆ ಜಮೀನಿನಲ್ಲಿ ಆ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ಸ್ಥಳವಾದ ಸೊರಬದ ‘ಬಂಗಾರಧಾಮ’ವೂ ಸೇರಿದಂತೆ ಜಿಲ್ಲೆಯ 64 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ ಗುರುತಿಸಿದೆ. ಅವುಗಳ ಸಮಗ್ರ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು. ಎಲ್.ಕೆ.ಜಿ ಯಿಂದ ಪಿ.ಯು.ಸಿ ವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತಿದೆ. ಅದರಲ್ಲಿ 19 ಶಾಲೆಗಳನ್ನು ಶಿವಮೊಗ್ಗ ಜಿಲ್ಲೆಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಶಿವಮೊಗ್ಗದಲ್ಲಿಯೇ ಕೆಪಿಎಸ್ ಶಾಲೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಕನ್ನಡದಲ್ಲಿ ಆದೇಶ ನೀಡಿದ ಐಪಿಎಸ್ ಅಧಿಕಾರಿ ಮೇಘಾ ಧ್ವಜಾರೋಹಣದ ನಂತರ ನಡೆದ ಪಥ ಸಂಚಲನದ 22 ತುಕಡಿಗಳನ್ನು ಮುನ್ನಡೆಸಿದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೇಘಾ ಅಗರವಾಲ್ ಅವರು ಕನ್ನಡದಲ್ಲಿ ಆದೇಶ ನೀಡಿ ಗಮನ ಸೆಳೆದರು. ಪಥ ಸಂಚಲನದಲ್ಲಿ ಕಸ್ತೂರಿಬಾ ಬಾಲಿಕಾ ಪ್ರೌಢಶಾಲೆಯ ಎನ್ಸಿಸಿ ತಂಡ ಪ್ರಥಮ ಗಾಜನೂರು ಮೊರಾರ್ಜಿ ದೇಸಾಯಿ (ಬಾಲಕಿಯರ ತಂಡ) ವಸತಿ ಶಾಲೆ ದ್ವಿತೀಯ ಜವಾಹರ ನವೋದಯ ಶಾಲೆಯ ಬಾಲಕರ ವಿಭಾಗ ಮೂರನೇ ಸ್ಥಾನ ಪಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಭಾರತ ಭಾಗ್ಯವಿದಾತ’ ಪ್ರದರ್ಶಿಸಿದ ಪೊಲೀಸ್ ಪಬ್ಲಿಕ್ ಶಾಲೆಗೆ ಪ್ರಥಮ ರಾಮಕೃಷ್ಣ ವಿದ್ಯಾನಿಕೇತನ ಶಾಲೆಗೆ ದ್ವಿತೀಯ ಜ್ಞಾನದೀಪ ಶಾಲೆ ತೃತೀಯ ಬಹುಮಾನ ಪಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.