ಶಿವಮೊಗ್ಗ:ದೇಶದ ಎಲ್ಲ ಕ್ಷೇತ್ರಗಳಲ್ಲಿ ಪ್ರಗತಿಯಾಗಿದ್ದರೂ ಆರೋಗ್ಯ ಕ್ಷೇತ್ರದ ಸಾಧನೆ ಅಷ್ಟೊಂದು ಆಶಾದಾಯಕವಾಗಿಲ್ಲದಿರುವುದು ಬೇಸರದ ಸಂಗತಿ ಎಂದುಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಅನುಷ್ಠಾನಗೊಂಡು ಒಂದು ವರ್ಷ ಪೂರೈಸಿದ ನಿಮಿತ್ತ ಮಂಗಳವಾರ ಏರ್ಪಡಿಸಲಾಗಿದ್ದ ಅರಿವು ಜಾಥಾ ಹಾಗೂ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಎಲ್ಲ ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸುವ ಮಹತ್ವದ ಯೋಜನೆಯಾಗಿದೆ ಎಂದು ಹೇಳಿದರು.
ಈ ಯೋಜನೆಯಡಿ ಬಿಪಿಎಲ್ ಕುಟುಂಬದವರು ₹ 5ಲಕ್ಷಗಳವರೆಗೆ, ಎಪಿಎಲ್ ಕುಟುಂಬದ ಸದಸ್ಯರು ವಾರ್ಷಿಕವಾಗಿ₹ 1.50 ಲಕ್ಷ ದವರೆಗೆ ಉಚಿತ ಆರೋಗ್ಯ ಸೌಲಭ್ಯ ಪಡೆಯಬಹುದು. ಈ ಯೋಜನೆಯಡಿ 1,650 ಚಿಕಿತ್ಸೆ ವಿಧಾನ ಲಭ್ಯವಿವೆ. ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ.ದೇಶದಲ್ಲಿ ಒಂದು ವರ್ಷದಲ್ಲಿ 20 ಕೋಟಿ ಜನ ಹಾಗೂ ಜಿಲ್ಲೆಯಲ್ಲಿ 7 ಸಾವಿರ ಜನರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಜನರು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ,ಪ್ರಮುಖರಾದ ಡಾ.ನಾಗರಾಜ್ ನಾಯ್ಕ್,ಡಾ.ಶಿವಯೋಗಿ, ಡಾ.ನಟರಾಜ್, ಡಾ.ಹನುಮಂತಪ್ಪ, ಡಾ.ಶಮಾ, ಮುರಳಿ, ಸಂಗಮೇಶ್, ಎಂ.ಎ.ಅತ್ತಾರ್, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಆರೋಗ್ಯ ಇಲಾಖೆಯ ವಿವಿಧ ಶ್ರೇಣಿಯ ಅಧಿಕಾರಿಗಳು, ನರ್ಸಿಂಗ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.