
ಶಿವಮೊಗ್ಗ: ಕೇಂದ್ರ ಸರ್ಕಾರದ ಆರ್ಥಿಕ ನೆರವಿನೊಂದಿಗೆ ಕೈಗೊಳ್ಳಲಾದ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳದಿರುವುದು ಬೇಸರದ ಸಂಗತಿ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಭೂಸ್ವಾಧೀನ, ಅರಣ್ಯ ಸಂಬಂಧಿ ಸಮಸ್ಯೆಗಳು ಹಾಗೂ ರೈಲ್ವೇ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಕುಂಸಿಯಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಬಿಟ್ಟು ಕೊಡಲು ಮುಂದಾಗಿರುವ ರೈತರೊಂದಿಗೆ ಸಮಾಲೋಚನೆ ನಡೆಸಬೇಕು. ಭೂಸ್ವಾಧೀನ ಮತ್ತು ಭೂಮಿಯ ಪೋಡಿ ಕಾರ್ಯವನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಆಗಸ್ಟ್ ಒಳಗಾಗಿ ಪೂರ್ಣಗೊಳಿಸುವಂತೆ ಹೇಳಿದರು.
ಸಭೆಯಲ್ಲಿ ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿ-69 ಶಿವಮೊಗ್ಗದಿಂದ ಆನಂದಪುರದವರಗೆ ಚತುಷ್ಟಥ ರಸ್ತೆ, ಹೊಸೂರು ಮತ್ತು ತಾಳಗುಪ್ಪ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ, ಸಾಗರ ಪಟ್ಟಣದಲ್ಲಿ ಚತುಷ್ಟಥ ರಸ್ತೆ, ರಾಷ್ಟ್ರೀಯ ಹೆದ್ದಾರಿ-766ಸಿ ಬೈಂದೂರಿನಿಂದ ನಾಗೋಡಿಯವರಗೆ ದ್ವಿಪಥ ರಸ್ತೆ ನಿರ್ಮಾಣ, ಹೊಸನಗರ ಹಾಗೂ ಬೆಕ್ಕೋಡಿ ಬಳಿ 2 ಸೇತುವೆ ಹಾಗೂ ದ್ವಿಪಥ ರಸ್ತೆ ನಿರ್ಮಾಣ ಮತ್ತು ಶಿಕಾರಿಪುರ ಪಟ್ಟಣದ ಬೈಪಾಸ್ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ-169ರ ನೆಲ್ಲಿಸರ ಕ್ಯಾಂಪ್ನಿಂದ ತೀರ್ಥಹಳ್ಳಿ ಪಟ್ಟಣದವರೆಗೆ ಚತುಷ್ಟಥ ರಸ್ತೆ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ-169ಎ ಮೇಗರವಳ್ಳಿಯಿಂದ ಆಗುಂಬೆವರೆಗೆ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿಯ ಪ್ರಗತಿ ಮಾಹಿತಿ ಪಡೆಯಲಾಯಿತು.
ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.