ಹೊಳೆಹೊನ್ನೂರು: ಪಟ್ಟಣದ ಕನ್ನೇಕೊಪ್ಪ ಹೊನ್ನೂರಮ್ಮ ನಗರದಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜಿಗೆ ಆಗ್ರಹಿಸಿ ಸ್ಥಳೀಯರು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಎದುರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಹಲವು ವರ್ಷದಿಂದ ಈ ಭಾಗದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿಲ್ಲ. ಎರಡು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಆದರೆ ಪೈಪ್ಲೈನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ನಲ್ಲಿ ಸಂಪರ್ಕ ಇವೆ. ಪೈಪ್ಗಳು ಹಳೆಯದಾಗಿದ್ದು, ಅಲ್ಲಲ್ಲಿ ನೀರು ಸೋರಿಕೆಯಾಗುತ್ತಿದೆ. ಹೀಗಾಗಿ ಎಲ್ಲ ಮನೆಗಳಿಗೂ ನೀರು ತಲುಪುತ್ತಿಲ್ಲ ಎಂದು ಆರೋಪಿಸಿದರು.
‘ವಾರದಿಂದ ನೀರು ಸರಬರಾಜು ಮಾಡಿಲ್ಲ. ಪಟ್ಟಣ ಪಂಚಾಯಿತಿಗೆ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಜಾವಾಬ್ದಾರಿ ತೋರುತ್ತಿದ್ದಾರೆ. ಜನರೊಂದಿಗೆ ಉಡಾಫೆಯಿಂದ ನಡೆದುಕೊಳ್ಳುತ್ತಾರೆ’ ಎಂದು ಆರೋಪಿಸಿದ ಪ್ರತಿಭಟನಕಾರರು, ಹಳೆ ಪೈಪ್ ಬದಲಾಯಿಸಿ ಸಮರ್ಪಕ ನೀರು ಪೂರೈಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಚಂದನ್, ಮುಖಂಡರಾದ ಆರ್.ಉಮೇಶ್, ಇ.ರಮೇಶ, ಎಂ.ಆರ್.ಕರಿಯಪ್ಪ, ಪುನೀತ್ ಕುಮಾರ್, ಡಿ.ಶ್ರೀನಿವಾಸ, ವಾಜೀದ್, ಕುಮಾರ್, ಮಹಿಳೆಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.