ADVERTISEMENT

15ರಿಂದ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವ

ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 4:40 IST
Last Updated 8 ಏಪ್ರಿಲ್ 2022, 4:40 IST
ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನ
ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನ   

ಶಿಕಾರಿಪುರ:ಪಟ್ಟಣದ ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಟಿ.ಎಸ್. ಮೋಹನ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಕಾರಣ ಎರಡು ವರ್ಷಗಳಿಂದ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಏ.15, 16 ರಂದು ನಡೆಯುವ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಉದ್ದೇಶದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ. ಭಕ್ತರು ಅಗತ್ಯ ನೆರವು ನೀಡಿ ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಲು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಪುರಸಭೆ ಅಧ್ಯಕ್ಷೆ ಹಾಗೂ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವ ನಡೆಸಲು ಮುಂದಾಗಿದ್ದೇವೆ. ಏ.15ರಂದು ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಏ.16ರಂದು ಬೇರೆ ಜಿಲ್ಲೆಗಳ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಿದ್ದಾರೆ. ಬ್ರಹ್ಮರಥೋತ್ಸವ ಪ್ರಯುಕ್ತ ಏ.16ರಂದು ಪುರಸಭೆ ಸದಸ್ಯರು ಹಾಗೂ ಸಿಬ್ಬಂದಿಯಿಂದ ಅನ್ನಸಂತರ್ಪಣೆ ನಡೆಯಲಿದೆ’ ಎಂದರು.

ADVERTISEMENT

ಜಾತ್ರಾ ಮಹೋತ್ಸವ ಸಮಿತಿ ಸಂಚಾಲಕರಾದ ರೇಣುಕಸ್ವಾಮಿ, ಭದ್ರಾಪುರ ಫಾಲಾಕ್ಷ, ಹರಿಹರ ಸಿದ್ದಲಿಂಗೇಶ್, ಜೀನಳ್ಳಿ ಪ್ರಶಾಂತ್, ಮಯೂರ್ ದರ್ಶನ್, ಮಂಜುಸಿಂಗ್, ಮಹಾಲಿಂಗಪ್ಪ, ಸ.ನ. ಮಂಜಪ್ಪ ಇದ್ದರು.

‘ಯಾವುದೇ ಧರ್ಮದವರಿಗೆ ನಿರ್ಬಂಧ ಹೇರಿಲ್ಲ’

‘ಜಾತ್ರಾ ಮಹೋತ್ಸವದಲ್ಲಿ ವಾಣಿಜ್ಯ ಮಳಿಗೆಗಳನ್ನು ಹಾಗೂ ಮಕ್ಕಳ ಆಟಿಕೆ ಯಂತ್ರಗಳನ್ನು ಹಾಕಲು ಅವಕಾಶ ನೀಡಲಾಗಿದೆ. ದೇವಸ್ಥಾನ ಆವರಣದಿಂದ ದೂರದಲ್ಲಿ ಮಳಿಗೆ ಹಾಕಬೇಕು. ಜಾತ್ರೆಯಲ್ಲಿ ಯಾವುದೇ ಧರ್ಮದವರಿಗೆ ನಿರ್ಬಂಧ ಹೇರಿಲ್ಲ. ಎಲ್ಲ ಧರ್ಮದವರು ವ್ಯಾಪಾರ ವಹಿವಾಟು ನಡೆಸಬಹುದು’ ಎಂದು ಜಾತ್ರಾ ಮಹೋತ್ಸವ ಸಂಚಾಲಕ ಗುರುರಾಜ್ ರಾವ್ ಜಗತಾಪ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.