ADVERTISEMENT

ಅಷ್ಟು ಸುಲಭವಾಗಿ ನಾನು ಸಾಯುವುದಿಲ್ಲ: ಎಚ್‌ಡಿಕೆ ಟಾಂಗ್

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2018, 18:46 IST
Last Updated 28 ಅಕ್ಟೋಬರ್ 2018, 18:46 IST

ಶಿರಾಳಕೊಪ್ಪ: ‘ನಾನು ಅಷ್ಟು ಸುಲಭವಾಗಿ ಸಾಯುವುದಿಲ್ಲ. ಇಸ್ರೇಲ್‌ಗೆ ಭೇಟಿ ನೀಡಿದಾಗ ಆದ ನೋವನ್ನು ಜನರ ಬಳಿಯಲ್ಲಿ ಹಂಚಿಕೊಂಡಿದ್ದೇನೆ. ನನಗೆ ಆದ ಯಾತನೆಯನ್ನು ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವ ಪುಟ್ಟರಾಜು ಅವರು ಪ್ರತ್ಯಕ್ಷವಾಗಿ ಕಂಡಿದ್ದಾರೆ. ಈ ಬಗ್ಗೆ ಕೆ.ಎಸ್.ಈಶ್ವರಪ್ಪ ನೀಡಿರುವ ಸಲಹೆ ಸ್ವೀಕರಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶಿವಮೊಗ್ಗ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಭಾನುವಾರ ಬಂದಿದ್ದ ಅವರು ಸಮೀಪದ ಮಂಚಿಕೊಪ್ಪ ಹೆಲಿಪ್ಯಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿ ಕಾಂಗ್ರೆಸಿಗರು ಲಕ್ಷ್ಮೀ ಹೆಬ್ಬಾಳಕರ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಏಕವಚನದಲ್ಲಿ ಮಾತನಾಡುತ್ತಿದ್ದು, ಅವರಿಗೆ ಮುಖ್ಯಮಂತ್ರಿ ಬುದ್ಧಿ ಹೇಳಬೇಕು ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಶಾಸಕಾಂಗ ಪಕ್ಷದ ನಾಯಕರಾಗಿದ್ದ ವೇಳೆ ಬಿ.ಎಸ್. ಯಡಿಯೂರಪ್ಪ ಯಾವ ರೀತಿಯ ಭಾಷೆ ಬಳಸುತ್ತಿದ್ದರು ಎಂಬುದನ್ನು ಬಿಜೆಪಿ ನಾಯಕರು ಸ್ಮರಿಸಿಕೊಳ್ಳಲಿ’ ಎಂದು ಟಾಂಗ್ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.