ADVERTISEMENT

ಸಂಘಟನೆಯ ಶಕ್ತಿ ಹೆಚ್ಚಿದರೆ ಪಕ್ಷಕ್ಕೆ ಬಲ: ಜೆಡಿಎಸ್‌ ಜಿಲ್ಲಾ ಘಕಟದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 8:28 IST
Last Updated 28 ನವೆಂಬರ್ 2021, 8:28 IST
ಶಿವಮೊಗ್ಗದ ಜೆಡಿಎಸ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜೆಡಿಎಸ್‌ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶ್ರೀಕಾಂತ್ ಮಾತನಾಡಿದರು.
ಶಿವಮೊಗ್ಗದ ಜೆಡಿಎಸ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜೆಡಿಎಸ್‌ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶ್ರೀಕಾಂತ್ ಮಾತನಾಡಿದರು.   

ಶಿವಮೊಗ್ಗ: ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜೆಡಿಎಸ್‌ ಅಧಿಕಾರ ಹಿಡಿಯುವ ಗುರಿಯೊಂದಿಗೆ ಪಕ್ಷ ಕಟ್ಟುವ ಕೆಲಸವನ್ನು ಕಾರ್ಯಕರ್ತರು ಹಾಗೂ ಮುಖಂಡರು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜೆಡಿಎಸ್‌ ಜಿಲ್ಲಾ ಘಕಟದ ಅಧ್ಯಕ್ಷ ಎಂ.ಶ್ರೀಕಾಂತ್‌ ಹೇಳಿದರು.

ಇಲ್ಲಿನ ಜೆಡಿಎಸ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜೆಡಿಎಸ್‌ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಬೂತ್‌ ಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಬೇಕು. ಜೆಡಿಎಸ್‌ ಎಂದರೆ ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತ ಎಂಬ ಭಾವನೆ ಇತ್ತು. ಆದರೆ, ಇಂದು ಗ್ರಾಮಗಳಲ್ಲೂ ಪಕ್ಷದ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚುತ್ತಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚು ಮತಗಳು ಗ್ರಾಮಾಂತರ ಪ್ರದೇಶದಿಂದಲೇ ಬಂದಿವೆ ಎಂದು ಹೇಳಿದರು.

ADVERTISEMENT

ಪಕ್ಷದ ಕಾರ್ಯಕರ್ತರು, ಮುಖಂಡರು ನಿರಂತರವಾಗಿ ಜನರ ಸಂಪರ್ಕದಲ್ಲಿರಬೇಕು. ಅಲಕ್ಷ್ಯ ಮಾಡದೇ ಅವರ ಸಮಸ್ಯೆಗಳನ್ನು ಆಲಿಸಬೇಕು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಬೇಕು. ಆ ಮೂಲಕ ಪಕ್ಷಕ್ಕೆ ಹೆಚ್ಚು ಬೆಂಬಲ ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಘಟನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ತಳಮಟ್ಟದಿಂದ ಸಂಘಟನೆ ಬಲಗೊಂಡರೆ ಪಕ್ಷವೂ ಗಟ್ಟಿಗೊಳ್ಳುತ್ತದೆ. ಮುಂದೆ ಎಲ್ಲ ಚುನಾವಣೆಗಳು ಜೆಡಿಎಸ್‌ ಪಕ್ಷದ ಪರವಾಗಿ ಆಗಬೇಕಿದೆ. ಅಧಿಕಾರಕ್ಕೆ ಆಸೆ ಪಡದೆ, ಸಂಘಟನೆ ಮಾಡಿದರೆ ಪಕ್ಷದಲ್ಲಿ ಸ್ಥಾನಮಾನ ಸಿಕ್ಕೇ ಸಿಗುತ್ತದೆ. ಈ ನಿಟ್ಟಿನಲ್ಲಿ ಇಂದಿನಿಂದಲೇ ಕಾರ್ಯಕರ್ತರು ಬೂತ್‌ಮಟ್ಟದಿಂದ ಸಂಘಟನೆಗೆ ನಿರತರಾಗಬೇಕು ಎಂದು ಕರೆ ನೀಡಿದರು. ‌

ಸಭೆಯಲ್ಲಿ ಜಿಲ್ಲಾ ಮುಖಂಡರಾದ ರಾಮಕೃಷ್ಣ, ಉಮೇಶ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಏಳುಮಲೈ ಬಾಬು, ಸದಸ್ಯ ನಾಗರಾಜ್‌ ಕಂಕಾರಿ, ಮಾಜಿ ಸದಸ್ಯ ಪಾಲಾಕ್ಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.