ಶಿಕಾರಿಪುರ: ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಎನ್ಪಿಎಸ್ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
'ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ಹೊಸ ಪಿಂಚಣಿ ಯೋಜನೆ ಜಾರಿಯಿಂದ ನೌಕರರಿಗೆ ಭದ್ರತೆ ಇಲ್ಲದಂತಾಗಿದೆ. ಸಂಧ್ಯಾಕಾಲದಲ್ಲಿ ನೌಕರರ ಬದುಕು ಬೀದಿಗೆ ಬಂದಂತಾಗಿದೆ. ನಮ್ಮದು ಹಸಿವಿನ, ಕುಟುಂಬದ ಭದ್ರತೆಗಾಗಿನ ಹೋರಾಟವಾಗಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು’ ಎಂದು ಕರ್ನಾಟಕ ರಾಜ್ಯ ಎನ್ಪಿಎಸ್ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣನವರ್ ಒತ್ತಾಯಿಸಿದರು.
‘ದೇಶದ ನಾಲ್ಕು ರಾಜ್ಯಗಳಲ್ಲಿ ನೂತನ ಪಿಂಚಣಿ ಯೋಜನೆ ರದ್ದುಪಡಿಸಲಾಗಿದೆ. ನಮ್ಮ ರಾಜ್ಯದಲ್ಲೂ ಸರ್ಕಾರ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಪಟ್ಟಣದ ರಂಗಮಂದಿರದಿಂದ ಹೊರಟ ಎನ್ಪಿಎಸ್ ನೌಕರರ ಪ್ರತಿಭಟನಾ ಮೆರವಣಿಗೆ ಪೆಟ್ರೋಲ್ ಬಂಕ್ ರಸ್ತೆ, ಶಿವಮೊಗ್ಗ ಸರ್ಕಲ್, ತೇರುಬೀದಿ ಮೂಲಕ ಶಾಸಕ ಬಿ.ಎಸ್. ಯಡಿಯೂರಪ್ಪ ಮನೆ ತಲುಪಿತು. ಯಡಿಯೂರಪ್ಪ ಪರವಾಗಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮನವಿ ಸ್ವೀಕರಿಸಿದರು.
ಎನ್ಪಿಎಸ್ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ರಾಘವೇಂದ್ರ, ತಾಲ್ಲೂಕು ಅಧ್ಯಕ್ಷ ಹೂವ್ಯಾನಾಯ್ಕ, ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಬಿ. ಪಾಪಯ್ಯ, ಜಿಲ್ಲಾ ಗೌರವಾಧ್ಯಕ್ಷ ಬಿ.ಆರ್. ಮಂಜಪ್ಪ, ತಾಲ್ಲೂಕು ಅಧ್ಯಕ್ಷ ಎಂ.ಜಿ. ಪ್ರಕಾಶ್, ಮಾಜಿ ಅಧ್ಯಕ್ಷ ಚನ್ನೇಶ್, ಕಾರ್ಯದರ್ಶಿ ಲೋಕೇಶ್, ಸಿಆರ್ ಪಿ ಸಂಘದ ಅಧ್ಯಕ್ಷ ಕರಿಬಸಪ್ಪ, ಕಾರ್ಯದರ್ಶಿ ಚನ್ನೇಶ್, ಆರೋಗ್ಯ ಇಲಾಖೆ ರೇವಣಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಿಶ್ವನಾಥ್, ಕಂದಾಯ ಇಲಾಖೆ ಪ್ರಸನ್ನ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.