ADVERTISEMENT

ಗಾಂಧಿ ಜಯಂತಿ: 750 ಪಂಚಾಯಿತಿಗಳಲ್ಲಿ ‘ಅಮೃತ ಗ್ರಾಮ’

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 4:19 IST
Last Updated 3 ಅಕ್ಟೋಬರ್ 2021, 4:19 IST
ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಪಂಚಾಯಿತಿಯಲ್ಲಿ ಶನಿವಾರ ಗಾಂಧಿ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಚಾಲನೆ ನೀಡಿದರು.
ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ ಪಂಚಾಯಿತಿಯಲ್ಲಿ ಶನಿವಾರ ಗಾಂಧಿ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಚಾಲನೆ ನೀಡಿದರು.   

ಶಿವಮೊಗ್ಗ: ರಾಜ್ಯದ 750 ಗ್ರಾಮ ಪಂಚಾಯಿತಿಗಳಲ್ಲಿ ‘ಅಮೃತ ಗ್ರಾಮ’ ಯೋಜನೆ ಅನುಷ್ಟಾನಗೊಳಿಸಿದ್ದು, ಸರ್ಕಾರ ₹ 25 ಕೋಟಿ ಅನುದಾನ ಒದಗಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ತಾಲ್ಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ 32 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಜಾರಿಯಾಗಲಿದೆ. ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲಜೀವನ ಮಿಷನ್ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ADVERTISEMENT

100 ದಿನ ಉದ್ಯೋಗ ಖಾತ್ರಿ: ಸ್ವಚ್ಛ ಭಾರತ ಯೋಜನೆಯನ್ನು ಜಿಲ್ಲೆಯಾದ್ಯಂತಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿಯೊಂದು ಮನೆಗೆ ಶೌಚಾಲಯವನ್ನು ನಿರ್ಮಿಸಿ ಬಯಲು ಶೌಚಮುಕ್ತ ಗ್ರಾಮಗಳನ್ನು ರೂಪಿಸಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಕೂಲಿ ಕೆಲಸ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಅಭಿವೃದ್ಧಿಯಲ್ಲಿ ಜನಯ ಸಹಭಾಗಿತ್ವ ಅಗತ್ಯ: ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯ. ಜನರ ಭಾಗವಹಿಸುವಿಕೆಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಿದೆ. ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸರ್ಕಾರ ಜಾರಿಗೊಳಿಸುವ ಯೋಜನೆಗಳ ಅನುಷ್ಠಾನದಲ್ಲಿ ಜನರು ಜವಾಬ್ದಾರಿ ವಹಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಲ್ಲಿನ ಜನರೇ ಗ್ರಾಮಕ್ಕೆ ಅವಶ್ಯವಾದ ಯೋಜನೆಗಳನ್ನು ಗುರುತಿಸಿ, ಅನುಷ್ಠಾನಗೊಳಿಸುವ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದೆ ಎಂದರು.

ಶಾಸಕ ಅಶೋಕ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ, ಯೋಜನಾ ನಿರ್ದೇಶಕಿ ನಂದಿನಿ ಇದ್ದರು. ದಾಕ್ಷಾಯಿಣಿ ಮತ್ತು ಸಂಗಡಿಗರು ಗಾಂಧಿ ಭಜನೆ ಹಾಡಿದರು.

ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಯಿತು. ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಲಾಯಿತು.

10 ತಿಂಗಳು ಮಹಿಳೆಯರಿಗೆ ತರಬೇತಿ
ಗಾಂಧಿ ಜಯಂತಿ ದಿನದಂದು ಗ್ರಾಮೀಣ ಭಾಗದ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತಿದೆ. ಮಹಿಳೆಯರ ಮತ್ತು ದುರ್ಬಲ ವರ್ಗದವರ ರಕ್ಷಣೆಗಾಗಿ ‘ದೌರ್ಜನ್ಯದಿಂದ ಮುಕ್ತಿ’ ಕಾರ್ಯಕ್ರಮದ ಅಡಿಯಲ್ಲಿ ಮುಂದಿನ 10 ತಿಂಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸ್ವ–ಸಹಾಯ ಗುಂಪುಗಳ ಸದಸ್ಯೆಯರಿಗೆ ಶಿಕ್ಷಣ, ಆರೋಗ್ಯ ಸೇರಿ ಹಲವು ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು ಎಂದು ಸಚಿವ ಕೆ.ಎಸ್‌. ಈಶ್ವರ‍ಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.