ಹೊಸನಗರ: ತಾಲ್ಲೂಕಿನಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಬುಧವಾರ ಉದಯಶೆಟ್ಟಿ (37) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಡೆದಿದೆ. ಉದಯಶೆಟ್ಟಿ ಆತ್ಮಹತ್ಯೆಗೆ ಅಕ್ರಮ ಮದ್ಯ ಮಾರಾಟ ದಂಧೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ಉದಯಶೆಟ್ಟಿ ಕುಡಿತದ ಚಟಕ್ಕೆ ಬಲಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಚಿಕ್ಕ ಮಕ್ಕಳಿದ್ದು, ಕುಟುಂಬ ಬೀದಿಗೆ ಬಂದಿದೆ. ಇದಕ್ಕೆ ಅಕ್ರಮ ಮದ್ಯ ಮಾರಾಟ ಕಾರಣ. ಎರಡು ವರ್ಷಗಳಲ್ಲಿ ನಾಲ್ವರು ಕುಡಿತಕ್ಕೆ ಬಲಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಹಲವು ಬಾರಿ ಅಬಕಾರಿ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು.
ಸ್ಥಳಕ್ಕೆ ಬಂದ ನಗರ ಠಾಣೆ ಪಿಎಸ್ಐ ಪೂರ್ಣಚಂದ್ರ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡರು. ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿಗೆ ಕರೆ ಮಾಡಿದ ಪ್ರತಿಭಟನಕಾರರು, ಶೀಘ್ರ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಸ್ಥಳಕ್ಕೆ ಬಂದ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್ ಅಕ್ರಮ ದಂಧೆಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸ್ಥಳೀಯರ ಆಗ್ರಹಕ್ಕೆ ಮಣಿದ ಪಿಎಸ್ಐ ಪೂರ್ಣಚಂದ್ರ ಗ್ರಾಮಸ್ಥರೊಂದಿಗೆ ಅಕ್ರಮ ಮದ್ಯ ಮಾರಾಟಗಾರರನ್ನು ವಿಚಾರಣೆ ನಡೆಸಿದರು. ಗ್ರಾಮಸ್ಥರ ಆರೋಪದ ಬಗ್ಗೆ ಸ್ಪಷ್ಟನೆ ನೀಡುವಂತೆ ಎಚ್ಚರಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಅಶ್ವಿನಿ ರಾಜೇಶ್, ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಕುಮಾರ್, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಸುವರ್ಣ, ರಾಜೇಶ್ವರಿ, ಶ್ಯಾಮಲಾ, ಕಲಾವತಿ, ಇಂದಿರಾ, ಮಧುಕರಶೆಟ್ಟಿ, ಗೋಪಾಲಶೆಟ್ಟಿ, ಅನೂತ್ ಸುರೇಶ್, ಕಾರ್ತಿಕ್, ಹರೀಶ್ ಜೆಸಿಬಿ, ಗುಲಾಬಿ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.