ADVERTISEMENT

ಡಿಸೆಂಬರ್ ಅಂತ್ಯದೊಳಗೆ ಕುಡಿಯುವ ನೀರಿನ ಯೋಜನೆ ಕಾಮಗಾರಿ ಮುಗಿಸಿ: ವಿಜಯೇಂದ್ರ

ಅಂಜನಾಪುರ ಡ್ಯಾಮ್‌ನಿಂದ 199 ಜನವಸತಿಗಳಿಗೆ ಕುಡಿಯುವ ನೀರಿನ ಪೂರೈಕೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 5:16 IST
Last Updated 8 ಜುಲೈ 2025, 5:16 IST
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಶಾಸಕ ಬಿ.ವೈ.ವಿಜಯೇಂದ್ರ ಸೋಮವಾರ ಅಧಿಕಾರಿಗಳ ಸಭೆ ನಡೆಸಿದರು   

ಶಿವಮೊಗ್ಗ: ‘ಶಿಕಾರಿಪುರ ತಾಲ್ಲೂಕಿನ ಅಂಜನಾಪುರ ಡ್ಯಾಮ್‌ನಿಂದ ಜಲ ಜೀವನ್ ಮಿಷನ್ ಯೋಜನೆಯಡಿ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ, ಜನರಿಗೆ ಕುಡಿಯಲು ನೀರು ಪೂರೈಸಿ’ ಎಂದು ಶಾಸಕ ಬಿ.ವೈ. ವಿಜಯೇಂದ್ರ ಅಧಿಕಾರಿಗಳಿಗೆ ಗಡುವು ನೀಡಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಕಾಮಗಾರಿಯ ವೇಗವನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದರು.

ಯೋಜನೆಯಡಿ 2023ರ ಮಾರ್ಚ್‌ನಲ್ಲಿ ಗುತ್ತಿಗೆ ಕರಾರಿಗೆ ಒಪ್ಪಂದವಾಗಿದೆ. ನಿಗದಿಯಂತೆ 2024ರ ಸೆಪ್ಟೆಂಬರ್‌ ಒಳಗೆ ಪೂರ್ಣಗೊಳಿಸಬೇಕಿತ್ತು. ಕೆಲವು ತಾಂತ್ರಿಕ ಕಾರಣ ಮತ್ತು ಅರಣ್ಯ ಪ್ರದೇಶದ ಸಂಬಂಧ ಕಾಮಗಾರಿಯನ್ನು ನಿರ್ವಹಿಸಲು ಅಡಚಣೆಯಾಗಿತ್ತು. ಪ್ರಗತಿಯಲ್ಲಿರುವ ಓವರ್‌ ಹೆಡ್ ಟ್ಯಾಂಕ್‌ಗಳ ಕಾಮಗಾರಿಯನ್ನು ಒಂದು ತಿಂಗಳೊಳಗಾಗಿ, ನೀರಿನ ಸಂಸ್ಕರಣಾ ಘಟಕಗಳ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಹೇಳಿದರು.

ADVERTISEMENT

ಅರಣ್ಯ ಪ್ರದೇಶದಲ್ಲಿ ಬರುವ ಕಾಮಗಾರಿಯ ಜಾಗಕ್ಕೆ ತ್ವರಿತ ಗತಿಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ನಿಯಮಾನುಸಾರ ನಿರಾಕ್ಷೇಪಣಾ ಪತ್ರವನ್ನು ನೀಡುವಂತೆ ಸಾಗರ ವಿಭಾಗದ ಡಿಸಿಎಫ್‌ಗೆ ಸೂಚಿಸಿದರು. 

ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್. ಹೇಮಂತ್, ಸಾಗರ ಡಿಸಿಎಫ್ ಮೋಹನ್ ಕುಮಾರ್, ದಿಶಾ ಸಮಿತಿಯ ಸದಸ್ಯ ಕೆ.ಎಸ್.ಗುರುಮೂರ್ತಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಇಇ ರೂಪ್ಲಾನಾಯ್ಕ, ಎಇಇ ನಾಗೇಶಪ್ಪ, ಕೆ.ಎಲ್.ಎಸ್.ಆರ್ ಇನ್‌ಫ್ರಾಟೆಕ್ ಲಿ. ನಿರ್ದೇಶಕ ಶ್ರೀನಿವಾಸ, ನಿಪ್ಪಾನ್ ಇಂಡಿಯಾದ ನರೇಂದ್ರ ಹಾಜರಿದ್ದರು.

‘ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಹದಗೆಟ್ಟಿದೆ’

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೂ ಹದಗೆಟ್ಟಿದೆ. ಎರಡು ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಲೇ ಇರಬೇಕು ಎಂಬ ದುರುದ್ದೇಶದಿಂದಲೇ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಾಗರಕಲ್ಲು ಕಿತ್ತು ಹಾಕಿದಂತಹ ಪ್ರಚೋದನಕಾರಿ ಘಟನೆಗಳು ನಡೆಯುತ್ತಿವೆ.‌ ಆದರೆ ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ’ ಎಂದು ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.  

‘ಇದೊಂದು ರೀತಿಯ ಷಡ್ಯಂತ್ರ. ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳದೇ ಇರುವ ಪರಿಣಾಮ ದೇಶದ್ರೋಹಿಗಳಿಗೂ ಧೈರ್ಯ ಬರ್ತಾ ಇದೆ. ಯಾರು ಏನೇ ಮಾಡಿದರೂ ನಡೆಯುತ್ತದೆ. ರಾಜ್ಯ ಸರ್ಕಾರ ನಮಗೆ ಬೆಂಬಲ ನೀಡ್ತಾ ಇದೆ. ನಮ್ಮನ್ನು ಯಾರೂ ಅಲ್ಲಾಡಿಸಲು ಆಗಲ್ಲ. ಯಾವುದೇ ಶಿಕ್ಷೆ ಆಗಲ್ಲ ಎಂಬ ಮನೋಭಾವ ಅವರಲ್ಲಿ ಬೆಳೆದಿದೆ. ಇದು ದುಷ್ಕೃತ್ಯಗಳಿಗೂ ಪ್ರೇರಣೆಯಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.