ತೀರ್ಥಹಳ್ಳಿ: ತಾಲ್ಲೂಕು ಆಸ್ಪತ್ರೆಗೆ ಬೇಕಾದ ವ್ಯವಸ್ಥೆಯನ್ನು ಜೆಸಿ ಆಸ್ಪತ್ರೆಗೆ ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ. ಕಟ್ಟಡ, ಸುಸಜ್ಜಿತ ಚಾವಣಿ, ಯಂತ್ರೋಪಕರಣ, ಆಕ್ಸಿಜನ್ ಪ್ಲಾಂಟ್ ಸೌಲಭ್ಯ ಒದಗಿಸಿ ವೈದ್ಯಕೀಯ ಕಾರ್ಯಕ್ಷಮತೆ ಹೆಚ್ಚಿಸಲಾಗುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪಟ್ಟಣದ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ₹1.50 ಕೋಟಿ ವೆಚ್ಚದಲ್ಲಿ 25 ಹಾಸಿಗೆಯ ಐಸಿಯು ಘಟಕ, ಮಳೆಯಿಂದ ಸೋರುತ್ತಿದ್ದ ಆಸ್ಪತ್ರೆಯ ಚಾವಣಿ ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆಯ ಪರಿವರ್ತನೆಯಿಂದ ಬಡವರು, ದಲಿತರು, ಕೂಲಿಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದವರಿಗೂ ಉತ್ತಮ ಚಿಕಿತ್ಸೆ ಸಿಗಲಿದೆ. ತಾಲ್ಲೂಕು ಕಚೇರಿ, ಸರ್ಕಾರಿ ಆಸ್ಪತ್ರೆಯ ಉನ್ನತೀಕರಣಕ್ಕೆ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಶೇಷ ಆದ್ಯತೆಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ತಾಯಿ ಮಕ್ಕಳ ಆಸ್ಪತ್ರೆ ತಾಲ್ಲೂಕಿಗೆ ಮಂಜೂರು ಮಾಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಜೆಸಿ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಉತ್ತಮ ಸೇವಾ ಮನೋಭಾವದಿಂದ ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಅಭಿನಂದಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ, ಅಧ್ಯಕ್ಷೆ ಶಬನಮ್, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ವೈದ್ಯಾಧಿಕಾರಿ ನಟರಾಜ್, ಆಸ್ಪತ್ರೆ ವೈದ್ಯಾಧಿಕಾರಿ ಡಾ.ಗಣೇಶ ಭಟ್, ಡಾ. ನಾರಾಯಣ ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ನಾಗರಾಜ್ ಶೆಟ್ಟಿ, ಸಂದೇಶ್ ಜವಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.