ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನಲ್ಲಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮೊದಲ ಹಂತದಲ್ಲಿ 131 ಎಕರೆ ಜಮೀನು ಮಂಜೂರಾಗಿದ್ದು, ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಜಂಟಿಯಾಗಿ ಸರ್ವೆ ನಡೆಸಲಿದೆ ಎಂದು ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು.
ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರರೊಂದಿಗೆ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದಿಂದ ಮಂಜೂರಾಗಿರುವ ಜಮೀನನನ್ನು ಪಾರದರ್ಶಕವಾಗಿ ಹಂಚಿಕೆ ಮಾಡಲಾಗುವುದು ಎಂದರು.
ಇನ್ನೂ ಹಲವು ಸಂತ್ರಸ್ತ ರೈತರ ಹೆಸರು ಆಯ್ಕೆ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು. ಕೆಲ ರೈತರು ತಮ್ಮ ಹೆಸರು ಕೈಬಿಟ್ಟು ಹೋಗಿರುವ ಬಗ್ಗೆ ಶಾಸಕರ ಗಮನಕ್ಕೆ ತಂದರು.
‘ಸಂತ್ರಸ್ತರು ಸಾಗುವಳಿ ಮಾಡುತ್ತಿರುವ ಜಮೀನಿನ ಪಹಣಿ ಹೊಂದಿದ್ದಾರೆ. ಆದರೆ, ಆಯ್ಕೆ ಪಟ್ಟಿಯಲ್ಲಿ ಅವರ ಹೆಸರುಗಳು ಬಿಟ್ಟು ಹೋಗಿದೆ. ಎಲ್ಲ ಅರ್ಹ ಸಂತ್ರಸ್ತರಿಗೆ ನ್ಯಾಯ ದೊರಕಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಶಾಸಕರು ತಹಶೀಲ್ದಾರ್ ಎನ್.ಜೆ.ನಾಗರಾಜ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿ ಐ.ಎಂ. ನಾಗರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.