ಶಿವಮೊಗ್ಗ: ಲಾಕ್ಡೌನ್ನಲ್ಲಿ ಸಂಕಷ್ಟಕ್ಕೆ ಸಿಲುಕುವ ಜನರಿಗೆ ತಲಾ ₹10 ಸಾವಿರ ನೆರವು ನೀಡಲು ನಾವೇನು ನೋಟ್ ಪ್ರಿಂ ಮಾಡ್ತೀವಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು 14 ದಿನ ತಮ್ಮ ಬಾಯಿಗಳಿಗೆ ಬೀಗ ಹಾಕಿಕೊಂಡರೆ ಲಾಕ್ಡೌನ್ ಸಂಪೂರ್ಣ ಯಶಸ್ವಿಯಾಗುತ್ತದೆ. ಎಲ್ಲೋ ಎ.ಸಿ. ಕೊಠಡಿಗಳಲ್ಲಿ ಕುಳಿತು ಅನಗತ್ಯ ಟೀಕೆ ಮಾಡುವುದು ವಿರೋಧ ಪಕ್ಷಗಳ ನಾಯಕರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಹೇಳಿದಂತೆ ₹ 10 ಸಾವಿರ ಕೊಡಲು ಸಾಧ್ಯವಿಲ್ಲ ಎಂದು ಕುಟುಕಿದರು.
ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದೆ. ಇಂತಹ ಸಮಯದಲ್ಲಿ ಅಗತ್ಯ ಸಹಕಾರ, ಸೂಕ್ತ ಸಲಹೆ ನೀಡಬೇಕು. ಆದರೆ, ಈ ಮೂವರೂ ಅದ್ಯಾವುದನ್ನೂ ಮಾಡದೆ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿದ್ದಾರೆ. ಇಂತಹ ಕಾಯಿಲೆ ಬರುತ್ತದೆ ಎಂದು ಅವರು ನಿರೀಕ್ಷೆ ಮಾಡಿದ್ದರಾ? ಸರ್ಕಾರ ಅನಿವಾರ್ಯವಾಗಿ ಲಾಕ್ಡೌನ್ ಜಾರಿ ಮಾಡಿದೆ. ನಿಯಂತ್ರಣಕ್ಕೆ ಹಲವು ಕಠಿಣ ನಿರ್ಧಾರ ತೆಗೆದುಕೊಂಡಿದೆ ಎಂದು ಸಮರ್ಥಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.