ADVERTISEMENT

ಕೆಳ ಹಂತದಲ್ಲಿ ಕಾರ್ಯಕರ್ತರ ಸಂಘಟನೆಗೆ ಕಾಗೋಡು ಕರೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 4:07 IST
Last Updated 19 ಫೆಬ್ರುವರಿ 2022, 4:07 IST
ಕಾಗೋಡು
ಕಾಗೋಡು   

ರಿಪ್ಪನ್‌ಪೇಟೆ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕೆಳಹಂತದಿಂದ ಕಾರ್ಯಕರ್ತರ ಸಂಘಟನೆ ಅತ್ಯಗತ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

ಪಟ್ಟಣದ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಯಕತ್ವ ಗುಣ ಬೆಳೆಸಿಕೊಳ್ಳಲು ಗರಿ ಗರಿ ಬಟ್ಟೆ ಹಾಕಿಕೊಂಡರೆ ಸಾಲದು. ಕೆಳ ಹಂತದಲ್ಲಿ ಶ್ರಮಜೀವಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ADVERTISEMENT

ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸುವ ಮನೋಭಾವ ಕಾರ್ಯಕರ್ತರಲ್ಲಿ ಬೆಳಸಬೇಕು. ಯುದ್ಧ ಕಾಲಕ್ಕೆ ಶಸ್ತ್ರಾಭ್ಯಾಸ ಸಲ್ಲದು. ಚುನಾವಣೆ ಪೂರ್ವದಲ್ಲಿಯೇ ಗ್ರಾಮೀಣ ಭಾಗದ ಪ್ರತಿ ಬೂತ್‌ ಮಟ್ಟದಲ್ಲಿನ ಕುಂದು ಕೊರತೆಗಳ ಸಮಗ್ರ ಮಾಹಿತಿ ಕಲೆ ಹಾಕಬೇಕು. ನನೆಗುದಿಗೆ ಬಿದ್ದಿರುವ ಬಗರ್‌ಹುಕುಂ ಸಾಗುವಳಿದಾರಿಗೆ ಹಕ್ಕುಪತ್ರ ವಿತರಿಸುವಂತೆ ಸರ್ಕಾರದ ಮೇಲೆ ಒತ್ತದ ಹೇರಬೇಕು. ಈ ನಿಟ್ಟಿನಲ್ಲಿ ಹಂತ ಹಂತದಲ್ಲಿ ಹೋರಾಟ ಹಮ್ಮಿಕೊಳ್ಳಲು ಸ್ಥಳೀಯ ಮುಖಂಡರು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಜನ ಸಾಮಾನ್ಯರು ಆಕ್ರೋಶಗೊಂಡಿದ್ದಾರೆ. ರಾಜ್ಯದಲ್ಲಿ ಒಳ ಜಗಳದಲ್ಲಿಯೇ ಬಿಜೆಪಿ ತನ್ನ ಅಧಿಕಾರ ತ್ಯಜಿಸಲಿದೆ. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ. ನಾಗರಾಜ್‌, ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೇದುಲ್ಲಾ ಸೇರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಹಾಲಿ ಸದಸ್ಯರು ಮತ್ತು ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.